September 10, 2026
Thursday, September 10, 2026
spot_img

‘ಇನ್ನೂ ಎರಡು ವಿಕೆಟ್ ಬೀಳಲಿವೆ, ಕಾದುನೋಡಿ’: ಡಿಕೆಶಿ ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಹೊಸದಿಗಂತ ವರದಿ ಬಳ್ಳಾರಿ:

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 100 ದಿನದ ಸಂಭ್ರಮದಲ್ಲೇ ಇಂದು ಒಂದು ವಿಕೆಟ್ ಬಿದ್ದಿದೆ. ಇನ್ನೂ ಎರಡು ವಿಕೆಟ್‌ಗಳು ಬೀಳಲಿವೆ, ಕಾದುನೋಡಿ. ಕೆಪಿಎಸ್ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸರದಿ ಬಂದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಸಂಜೆ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಹೆಸರಾದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದೆ ಎಂದರು. ಸದನದಲ್ಲಿ ಏಳು ದಿನಗಳ ಕಾಲ ನಿರಂತರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಭ್ರಷ್ಟಾಚಾರ ಪ್ರಕರಣದ ಆರೋಪಿ ನಾಗೇಂದ್ರ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಇದು ನಮ್ಮ ಹೋರಾಟದ ಮೊದಲ ಜಯ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜತೆಗೆ ಇನ್ನೊಂದು ವಿಕೆಟ್ ಬೀಳಲಿದೆ ಎಂದರು.

ನಾಗೇಂದ್ರ ದಲಿತರಾಗಿರುವ ಕಾರಣ ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಆದರೆ ತುಮಕೂರಿನ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕೆ ತೆಗೆದರು, ಅವರು ದಲಿತರಲ್ಲವೇ ಎಂದು ಪ್ರಶ್ನಿಸಿದ ಅವರು, ಹಗರಣಗಳಿಗೆ ಜಾತಿ ಬಣ್ಣ ಹಚ್ಚುವುದು ಸರಿಯಲ್ಲ ಎಂದರು.

ಮುಖ್ಯಮಂತ್ರಿಯಾಗಿ ಮುಂದುವರಿಯುವುದೇ ಅನುಮಾನ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದೇ ಅನುಮಾನ ಮೂಡಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಮಿಷನ್ ಮತ್ತು ಲೂಟಿಯ ಸರ್ಕಾರವಾಗಿದೆ ಎಂದು ಆರೋಪಿಸಿದ ಅಶೋಕ, ಪ್ರಸಕ್ತ ವರ್ಷ ಭೀಕರ ಬರ ಆವರಿಸಿದ್ದರೂ ಬೆಳೆ ವೀಕ್ಷಣೆಗೆ ಹೆಲಿಕಾಪ್ಟರ್‌ನಲ್ಲಿ ಬಂದರೆ ಹೇಗೆ, ಮೇಲಿನಿಂದ ನೋಡಿದರೆ ಬೆಳೆಗಳು ಕಾಣಿಸುತ್ತವೆಯೇ ಎಂದು ವ್ಯಂಗ್ಯವಾಡಿದರು. ಡಿ.ಕೆ.ಶಿವಕುಮಾರ್ ಒಬ್ಬ ಅಪ್ಪಟ ವ್ಯಾಪಾರಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಅವರಿಗೆ ಬಡವರ ಕಷ್ಟ ಕಾಣುವುದಿಲ್ಲ, ಅರ್ಥವಾಗುವುದಿಲ್ಲ ಎಂದು ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇನ್ನೂ ಒಂದು ವರ್ಷ ಆಯುಷ್ಯವಿದ್ದು, ಈ ಭ್ರಷ್ಟ ಸರ್ಕಾರವನ್ನು ಎಲ್ಲರೂ ಸೇರಿ ಕಿತ್ತುಹಾಕುವ ಕೆಲಸ ಮಾಡಬೇಕು ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ನಮ್ಮೆಲ್ಲರ ಗುರು. ಅವರ ಮಾರ್ಗದರ್ಶನದಂತೆ ಮುಂದಿನ ಚುನಾವಣೆ ಎದುರಿಸಿ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಇದನ್ನೂ ಓದಿ:

ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಅದನ್ನು ಪಡೆದರೆ ಪ್ರತಿಯೊಬ್ಬರ ಮೇಲೆ 10 ಸಾವಿರ ಸಾಲ ಬರಲಿದೆ. ಇದರಿಂದ ಬರುವ ಕಮಿಷನ್ ಮೇಲೆ ಕಣ್ಣಿಟ್ಟಿದ್ದು, ಇದೇ ಹಣದಿಂದ ಚುನಾವಣೆ ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ಆರೋಪಿಸಿದರು. ಬರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ರಸ್ತೆಗಳಿಲ್ಲ, ಕೆರೆಗಳಿಗೆ ನೀರಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ ಎಂದರು.

ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ

ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದ ಸರ್ಕಾರ ಇದಾಗಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಬಡವರಿಗಾಗಿ ಹೊಸ ಯೋಜನೆಗಳನ್ನು ತಂದು ಸಾಲ ನೀಡುವ ಮೂಲಕ ಅವರ ಬದುಕು ಹಸನಾಗಿಸಲು ಶ್ರಮಿಸುತ್ತಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯ ನೆಪದಲ್ಲಿ 2.5 ಲಕ್ಷ ಬೀದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಟೀಕಿಸಿದರು.

ತಳ್ಳುಗಾಡಿ ವ್ಯಾಪಾರಿಗಳನ್ನು ಬಿಡುತ್ತಿಲ್ಲ, ಅವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಬಡವರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಕಸ ಗುಡಿಸುವವರನ್ನೂ ಬಿಡುತ್ತಿಲ್ಲ. ಅವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ರಾಜ್ಯದ 23 ಲಕ್ಷ ಪೌರ ಕಾರ್ಮಿಕರಿಗೆ ವೇತನ, ಪಿಂಚಣಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಕಾರಜೋಳ, ಇಂತಹ ಸರ್ಕಾರವನ್ನು ತೊಲಗಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣ ವಾಪಸ್ ಜಮೆಯಾಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !