ಹೊಸದಿಗಂತ ವರದಿ ದಾವಣಗೆರೆ:
ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ತಾಲ್ಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕಮ್ಮತಹಳ್ಳಿ ಗ್ರಾಮದ ಬಸವರಾಜ್(31 ವರ್ಷ) ಹಾಗೂ ಶರತ್(26) ಮೃತಪಟ್ಟವರು.
ಬಸವರಾಜ ನಗರದ ಕೊಡಚಾದ್ರಿ ಚಿಟ್ಸ್ ಫಂಡ್ ನಲ್ಲಿ ಕೆಲಸ ಮಾಡುತ್ತಿದ್ದರು. ಆನಗೋಡಿನಿಂದ ದಾವಣಗೆರೆ ನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಹತೋಟಿ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ರಭಸವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆ ಬದಿಗೆ ಎಸೆಯಲ್ಪಟ್ಟು ಸಾಕಷ್ಟು ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:
ರಾತ್ರಿ ಅಪಘಾತ ಸಂಭವಿಸಿದ್ದರಿಂದ ತಕ್ಷಣಕ್ಕೆ ಯಾರ ಗಮನಕ್ಕೂ ಬಂದಿರಲಿಲ್ಲ. ಶನಿವಾರ ಮುಂಜಾನೆ ರಸ್ತೆಯಲ್ಲಿ ಸಾಗುತ್ತಿದ್ದ ಸವಾರರು ಶವಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಚಿಗಟೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮರಣೋತ್ತರ ಪರೀಕ್ಷೆಯನ್ನು ಶೀಘ್ರವಾಗಿ ಮುಗಿಸಿ ಶವಗಳನ್ನು ವಾರಸುದಾರರಿಗೆ ಹಸ್ತಾಂತರಿಸಲು ನೆರವಾದರು.



