ಹೊಸದಿಗಂತ ಡಿಜಿಟಲ್ ಡೆಸ್ಕ್
ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಬಾಲಕಿಯರ ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಸಮವಸ್ತ್ರ ಮತ್ತು ಹಿಜಾಬ್ ಧರಿಸುವ ಕುರಿತ ವಿಷಯಕ್ಕೆ ಸಂಬಂಧಿಸಿ ವಿವಾದ ಉಂಟಾಗಿತ್ತು. ಇದೀಗ ರಾಜ್ಯ ಸರಕಾರ ವಿದ್ಯಾರ್ಥಿನಿಯರಿಗೆ ನಿಗದಿಗೊಳಿಸಿರುವ ಸಮವಸ್ತ್ರ /ವಸ್ತ್ರ ಸಂಹಿತೆಯ ವಿಷಯದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸಲು ಆದೇಶ ಹೊರಡಿಸಿದೆ.
ಮಂಗಳವಾರ ಹೊರಡಿಸಿದ ಆದೇಶದಲ್ಲಿ, ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಅಥವಾ ವಸ್ತ್ರಸಂಹಿತೆಯನ್ನು ನಿಗದಿಗೊಳಿಸುವ ಕುರಿತು ಚಿಂತನ ಮಂಥನ ನಡೆಸಲು ಉನ್ನತಮಟ್ಟದ ಸಮಿತಿ ರಚಿಸಿ ಅಧ್ಯಯನ ನಡೆಸಿ ಸಲ್ಲಿಸಲಾಗುವ ಶಿಫಾರಸ್ಸುಗಳನ್ನು ಪರಿಶೀಲಿಸಿದ ನಂತರ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಪಕ್ರಿಯೆ ಆಗುವವರೆಗೂ ಉಡುಪಿ ಬಾಲಕಿಯರ ಸ.ಪ.ಪೂ. ಕಾಲೇಜು ತನ್ನ ಸಂಸ್ಥೆಯ ಹಂತದಲ್ಲಿ ವಿದ್ಯಾರ್ಥಿನಿಯರಿಗೆ ನಿಗದಿಗೊಳಿಸಿರುವ ಸಮವಸ್ತ್ರ /ವಸ್ತ್ರ ಸಂಹಿತೆಯ ವಿಷಯದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸಲು ಆದೇಶಿಸಿದೆ.
ಸರಕಾರಿ ಆದೇಶದ ಹಿನ್ನೆಲೆಯಲ್ಲಿ ಈ ಆದೇಶವನ್ನು ಪಾಲಿಸಿ ಯಾವುದೇ ಗೊಂದಲಗಳಿಗೆ ಅವಕಾಶವನ್ನು ನೀಡದೆ ಶೈಕ್ಷಣಿಕ ಹಿತದೃಷ್ಟಿಯಿಂದ ಎಲ್ಲರೂ ಸಮಾನತೆಯಿಂದ ತರಗತಿಗಳಿಗೆ ಹಾಜರಾಗುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿಲ್ಲಿ 1985ರಿಂದಲೂ ಸಮವಸ್ತ್ರ/ವಸ್ತ್ರ ಸಂಹಿತೆ ಪದ್ಧತಿ ಜಾರಿಯಲ್ಲಿತ್ತು. ಈ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿನಿಯರು ಪ್ರವೇಶ ಪಡೆಯುವ ವೇಳೆಯಲ್ಲಿ ಕಾಲೇಜು ನಿಗದಿ ಮಾಡಿದ ಸಮವಸ್ತ್ರ/ ವಸ್ತ್ರಸಂಹಿತೆ ಕುರಿತು ಮಾಹಿತಿ ಇದೆ. ಅದನ್ನು ಒಪ್ಪಿಯೇ ಸ್ವ-ಇಚ್ಛೆಯಿಂದ ಕಾಲೇಜಿಗೆ ದಾಖಲಾತಿಯನ್ನು ಪಡೆದಿರುತ್ತಾರೆ. ಆದರೆ ಪ್ರಸ್ತುತ ಈ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಬಗ್ಗೆ ಗೊಂದಲವನ್ನುಂಟು ಮಾಡಿರುವುದರಿಂದ ಈ ಬಗ್ಗೆ ಸರಕಾರಕ್ಕೆ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಲಾಗಿತ್ತು.
ಸರಕಾರಿ ಆದೇಶಕ್ಕೆ ಸಂಬಂಧಿಸಿದಂತೆ ಶಾಸಕ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಬಾಲಕಿಯರ ಸ.ಪ.ಪೂ. ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಪೋಷಕರನ್ನೊಳಗೊಂಡ ಶಿಕ್ಷಣ ಸೇವಾ ಸಮಿತಿಯ ಜಂಟಿ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದು ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ತರಗತಿಗೆ ಹಾಜರಾಗಬೇಕೆಂದು ನಿರ್ಣಯಿಸಲಾಯಿತು. ಇದಕ್ಕೆ ಮಕ್ಕಳ ಪೋಷಕರನ್ನು ಒಳಗೊಂಡ ಸಮಿತಿಯ ಸದಸ್ಯರು ಬೆಂಬಲವನ್ನು ಸೂಚಿಸಿದರು.
ಪ್ರಸ್ತುತ ಕೇವಲ ಆರು ಮಕ್ಕಳ ಅಶಿಸ್ತಿನ ವರ್ತನೆಯಿಂದಾಗಿ ಕಾಲೇಜಿನಲ್ಲಿರುವ 1000 ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಡಕು ಉಂಟಾಗುತ್ತಿದೆ. ಆದ್ದರಿಂದ ಸರಕಾರದ ಆದೇಶದಂತೆ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ತರಗತಿಗೆ ಹಾಜರಾಗುವುದು. ಈ ಬಗ್ಗೆ ಮಕ್ಕಳ ಪೋಷಕರಿಗೆ ಮನವರಿಕೆ ಮಾಡಿಕೊಡುವುದು ಸೂಕ್ತ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.