ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿನ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಸಿಯನ್ನು ಪೋಲಿಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಉಡುಪಿಯಲ್ಲಿ ಒಂದೇ ಕುಟುಂಬದ ಮಹಿಳೆ ಹಾಗೂ ಆಕೆಯ ಮೂರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಬೆಳಗಾವಿಯಲ್ಲಿ ಸೆರೆ ಸಿಕ್ಕಿದ್ದಾನೆ.
ಪ್ರವೀಣ್ ಚೌಗಲೆ ಎಂಬ ಆರೋಪಿಯೇ ಬಂಧಿತನಾಗಿದ್ದು, ಈತ ಹತ್ಯೆ ಮಾಡಿದ ನಂತರ
ಬೆಳಗಾವಿ ಜಿಲ್ಲೆಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದ. ಉಡುಪಿ ಹಾಗೂ ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಾರಾಷ್ಟ್ರಕ್ಕೆ ಪಲಾಯನ ಮಾಡಲು ರೆಡಿಯಾಗಿದ್ದ ಸಂದರ್ಭದಲ್ಲಿಯೇ ಮೊಬೈಲ್ ನೆಟ್ ವರ್ಕ್ ಟ್ರೇಸ್ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ಆರೋಪಿ CRPF ಯೋಧನಾಗಿದ್ದು, ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ಹೇಳಲಾಗಿದೆ. ಕೊಲೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ಹೊರಬರಬೇಕಿದೆ.