ಹೊಸದಿಗಂತ ವರದಿ ಯಾದಗಿರಿ:
ಸಾಲದ ಒತ್ತಡ ಮತ್ತು ಬೆಳೆ ವೈಫಲ್ಯದಿಂದ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಕಿಲ್ಲನಕೇರಾ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಶಿವರಾಜ (24) ಎಂದು ಗುರುತಿಸಲಾಗಿದೆ. ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸಮರ್ಪಕವಾಗಿ ಮೊಳಕೆ ಬರದೆ ಬೆಳೆ ಹಾನಿಯಾಗಿತ್ತು. ಇದರಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾದ ಶಿವರಾಜ, ಜಮೀನಿನಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಶಿವರಾಜ ಅವರು ಬ್ಯಾಂಕ್ ಹಾಗೂ ಖಾಸಗಿ ಮೂಲಗಳಿಂದ ಕೃಷಿಗಾಗಿ ಸಾಲ ಪಡೆದಿದ್ದು, ಸಾಲದ ಒತ್ತಡವೂ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾವಿನ ನಿಖರ ಕಾರಣ ಕುರಿತು ತನಿಖೆ ನಡೆಸುತ್ತಿದ್ದಾರೆ.



