ನಿರ್ಮಾಣ ಹಂತದ ಮಹಾದ್ವಾರ ಕುಸಿತ: ಓರ್ವ ಸಾವು, ನಾಲ್ವರಿಗೆ ಗಾಯ

ಹೊಸ ದಿಗಂತ ವರದಿ, ನಾಗಮಂಗಲ :

ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದುಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಕೂಲಿಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿ ನಾಲ್ಕು ಗಾಯಗೊಂಡಿರುವ ಘಟನೆ ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಕಲಬುರಗಿ ಜಿಲ್ಲೆಯ ಶರಣ್(27) ಎಂಬಾತನೇ ಸಾವನ್ನಪ್ಪಿರುವ ನತದೃಷ್ಟ ಕೂಲಿ ಕಾರ್ಮಿಕನಾಗಿದ್ದು, ಗಾಯಾಳುಗಳ ಹೆಸರು ತಿಳಿದುಬಂದಿಲ್ಲ.

ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ದಾನಿಗಳ ನೆರವಿನಿಂದ 20 ಅಡಿ ಎತ್ತರ 35ಅಡಿ ಉದ್ದದ ಮಹಾದ್ವಾರ ನಿರ್ಮಾಣ ಮಾಡಿಸಲಾಗುತ್ತಿತ್ತು. ಮಹಾದ್ವಾರದ ಮೇಲ್ಚಾವಣಿಗೆ ಕಾಂಕ್ರಿಟ್ ಹಾಕುವ ಸಲುವಾಗಿ ಸೆಂಟ್ರಿಗ್ ಹೊಡೆದು ಕಬ್ಬಿಣ ಕಟ್ಟಿ ಸೋಮವಾರ ಮಧ್ಯಾಹ್ನ ಕಾಂಕ್ರಿಟ್ ಹಾಕುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೆಂಟ್ರಿಂಗ್ ಮರಗಳನ್ನು ಸರಿಯಾಗಿ ಲಾಕ್ ಮಾಡದಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.

ಸೆಂಟ್ರಿಂಗ್ ಸಹಿತ ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ದಿಢೀರನೇ ಕುಸಿದ ಪರಿಣಾಮ ಕಾಂಕ್ರಿಟ್ ಹಾಕುತ್ತಿದ್ದ ನಾಲ್ಕು ಮಂದಿ ಕೂಲಿ ಕಾರ್ಮಿಕರು ಕಬ್ಬಿಣದ ಸರಳು ಮತ್ತು ಸೆಂಟ್ರಿಂಗ್ ಮಧ್ಯೆ ಸಿಲುಕಿ ಗಾಯಗೊಂಡರೆ, ಶರಣ್ ಹೊರಬರಲಾರದೆ ಗಂಭೀರವಾಗಿ ಗಾಯಗೊಂಡಿದ್ದನು.

ಬಳಿಕ ಜೆಸಿಬಿ ಯಂತ್ರದ ಮೂಲಕ ಸಿಲುಕಿಕೊಂಡಿದ್ದ ಶರಣ್‌ನನ್ನು ಹೊರತೆಗೆದು ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ನಾಲ್ವರು ಗಾಯಾಳುಗಳ ಪೈಕಿ ಒಬ್ಬ ಕೂಲಿ ಕಾರ್ಮಿಕನಿಗೆ ಕಾಲು ಮುರಿದಿದ್ದು ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡರು. ಶರಣ್ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿರಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಮೃತ ಶರಣ್ ವಾರಸುದಾರರು ದೂರದ ಕಲಬುರಗಿ ಜಿಲ್ಲೆಯಿಂದ ಬಂದ ನಂತರ ಮಂಗಳವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!