ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಸರಿಯಾದ ಹಳಿಗೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಶನಿವಾರ ‘ಭಾರತದ ಆರ್ಥಿಕತೆ ಮೇಲಿನ ಶ್ವೇತಪತ್ರ’ ಎಂಬ ವಿಷಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ 2017ರಲ್ಲಿ ಪದವೀಧರರ ನಿರುದ್ಯೋಗ ದರವು ಶೇ 17.3ರಷ್ಟಿತ್ತು. 2023ರಲ್ಲಿ ಇದು ಶೇ 13.4ಕ್ಕೆ ಇಳಿಕೆಯಾಗಿದೆ ಎಂದು ಹೇಳಿದರು.
ಸರ್ಕಾರದ ಸಾಧನೆಗಳನ್ನು ಹಾಳುಗೆಡುವ ಕಲೆ ಕಾಂಗ್ರೆಸ್ಗೆ ಕರಗತವಾಗಿದೆ. 2004ರಿಂದ 2014ರ ವರೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ಕೆಟ್ಟದಾಗಿ ನಿರ್ವಹಿಸಲಾಗಿದೆ ಎದರು.
ಭಾರತವು ತನ್ನ ಆರ್ಥಿಕತೆ ಬೆಳವಣಿಗೆಗೆ ವಿದೇಶಿ ಬಂಡವಾಳವನ್ನು ನೆಚ್ಚಿಕೊಂಡಿರುವ ರಾಷ್ಟ್ರವೆಂಬ ಹಣೆಪಟ್ಟಿ ಹೊಂದಿತ್ತು. ಈಗ ಅದನ್ನು ಕಳಚಿ ಹಾಕಿದ್ದು, ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಶೀಘ್ರ ಜಾಗತಿಕ ಮಟ್ಟದಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.