ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮುಂದಿನ ವರ್ಷ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುನ್ನ ರಾಜಕೀಯ ಲಾಭಕ್ಕಾಗಿ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸುವ ಕುರಿತು ಪ್ರಸ್ತಾಪಿಸಲಾಗಿದೆ ಎಂದು
ಬಹುತೇಕ ಪ್ರತಿಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ.

ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು, ಏಕರೂಪ ನಾಗರಿಕ ಸಂಹಿತೆ ಮಹತ್ವದ ಕುರಿತು ಬಹಿರಂಗವಾಗಿಯೇ ಪ್ರತಿಪಾದಿಸಿದ್ದು, ಇದು ಜಾರಿಗೆ ಬಂದರೆ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇನ್ನು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ ಜೂನ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಕೇಳಲಾಗಿದೆ. ಇದಕ್ಕಾಗಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಜುಲೈ 14ಕ್ಕೆ ಕೊನೆಗೊಳ್ಳಲಿದೆ.

ಸಂಸತ್ ಮುಂಗಾರು ಅಧಿವೇಶನವು ಜುಲೈ ತಿಂಗಳ ಕೊನೆಯ ವಾರದಲ್ಲಿ ಆರಂಭವಾಗಿ ಆಗಸ್ಟ್ 10ಕ್ಕೆ ಮುಗಿಯಬಹುದು ಎಂದು ಅಂದಾಜಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜುಲೈ 17 ಅಥವಾ 20 ರಿಂದ ಅಧಿವೇಶನ ಪ್ರಾರಂಭವಾಗಬಹುದು ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!