ಹೊಸ ದಿಗಂತ ವರದಿ, ಮಂಗಳೂರು:
ಹೈಕೋರ್ಟ್ ಆದೇಶದಂತೆ ಕಾಲೇಜು ಕ್ಯಾಂಪಸ್, ತರಗತಿ ಕೊಠಡಿಯೊಳಗೆ ಸಮವಸ್ತ್ರ ಕಡ್ಡಾಯಗೊಳಿಸಬೇಕು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ನಗರದ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಕ್ಯಾಂಪಸ್ ಒಳಗಡೆ ಮಾತ್ರವಲ್ಲದೆ, ತರಗತಿ ಕೊಠಡಿಯೊಳಗೂ ಹಿಜಾಬ್ ಧರಿಸಿ ಆಗಮಿಸುತ್ತಿದ್ದಾರೆ. ಇದಕ್ಕೆ ಕೆಲ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಬೆಂಬಲ ನೀಡುತ್ತಿದ್ದಾರೆ. ಸಮವಸ್ತ್ರ ಕಡ್ಡಾಯಗೊಳಿಸುವಂತೆ ಪ್ರಾಂಶುಪಾಲರಿಗೆ ನಾವು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಕಾಲೇಜು ನಿಯಮ ಎಲ್ಲರಿಗೂ ಒಂದೇ ರೀತಿಯಲ್ಲಿ ಅನ್ವಯವಾಗಬೇಕು. ಮಂಗಳೂರು ವಿವಿ ಸಿಂಡಿಕೇಟ್ ಸಭೆ ನಿರ್ಣಯದಂತೆ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಪಾಲನೆಗೆ ಕಾಲೇಜು ಪ್ರಾಂಶುಪಾಲರು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.