ಹೊಸದಿಗಂತ ವರದಿ ಬಳ್ಳಾರಿ:
ಚುನಾವಣೆ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮೀತ್ ಶಾ ಜೀ ಅವರು, ಫೆ.23 ರಂದು ಗಣಿನಾಡು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಂಡೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಡೂರು ತಾಲೂಕಿನ ತೋರಣಗಲ್ಲು ಪಟ್ಟಣದಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರಮುಖರ ಸಭೆ ನಡೆಸಲಿದ್ದಾರೆ.
ಸಂಡೂರಿನಲ್ಲಿ ಆಯೋಜಿಸಿದ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿ.ಎಂ.ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ನಮ್ಮ ಸರ್ಕಾರದ ಅನೇಕ ಸಚಿವರು ಭಾಗವಹಿಸಲಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು. ಬಳ್ಳಾರಿ ಜಿಲ್ಲೆಯಲ್ಲೇ ಸ್ಪರ್ಧೆ ಮಾಡುವೆ, ಇದು ಖಚಿತ.
ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನದಾಗಿದೆ. ಎಲ್ಲದಕ್ಕೂ ವರಿ ಷ್ಠರ ತೀರ್ಮಾನವೇ ಅಂತಿಮ, ಈ ಹಿಂದೆ ಸಂಸದರಾಗಿದ್ದಾಗ ಮಾಜಿ ಸಿ.ಎಂ.ಬಿ.ಎಸ್.ಯಡಿಯೂರಪ್ಪ ಹಾಗೂ ನನಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ವರಿಷ್ಠರು ಅವಕಾಶ ಕಲ್ಪಿಸಿದರು. ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದಾಗ 4ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತು.
ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಬಿಜೆಪಿಯ ಕಮಲ ಎಲ್ಲ ಕ್ಷೇತ್ರದಲ್ಲೂ ಹಾರಾಡಿದೆ. ವರಿಷ್ಠರಿಗೆ ನಾನು ಸ್ಪರ್ಧಿಸುವ ಕ್ಷೇತ್ರಗಳ ಕುರಿತು ಮನವರಿಕೆ ಮಾಡುವೆ, ಯಾವುದೇ ಕಾರಣಕ್ಕೂ ವರಿಷ್ಠರ ತೀರ್ಮಾನವೇ ಅಂತಿಮ, ನಾನು ಅಲ್ಲ ಎಲ್ಲರೂ ಪಾಲನೆ ಮಾಡಬೇಕು ಎಂದರು.