ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ಬಜೆಟ್ ಅಧಿವೇಶನದ ವೇಳೆ ಡೋಕ್ಲಾಮ್ ವಿಚಾರ ಪ್ರಸ್ತಾಪಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷಣವು ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಿದ್ದ ರಾಹುಲ್, ಚೀನಾ–ಡೋಕ್ಲಾಮ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಬರೆದಿರುವ ಪುಸ್ತಕವನ್ನು ಉಲ್ಲೇಖಿಸಲು ಮುಂದಾದರು.
ಇದಕ್ಕೆ ತಕ್ಷಣವೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿ, ಆ ಪುಸ್ತಕ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಕಟವಾಗದ ಗ್ರಂಥದ ವಿಷಯವನ್ನು ಸಂಸತ್ತಿನಲ್ಲಿ ಉಲ್ಲೇಖಿಸುವುದು ನಿಯಮಬಾಹಿರ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಧ್ಯಪ್ರವೇಶಿಸಿ ರಾಹುಲ್ ಅವರ ಮಾತನ್ನು ನಿಲ್ಲಿಸಿದರು.
ಇದನ್ನೂ ಓದಿ:
ಸದನವನ್ನು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಬಾರದು ಎಂದು ರಾಜನಾಥ್ ಸಿಂಗ್ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಚೀನಾ ಸಂಬಂಧಿತ ವಿಚಾರಗಳ ಮೇಲೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಸ್ಪೀಕರ್ ಅವರನ್ನು ಮನವಿ ಮಾಡಿದರು.
ಇನ್ನೊಂದೆಡೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನವು ಸ್ಪಷ್ಟ ನಿಯಮಗಳ ಪ್ರಕಾರವೇ ನಡೆಯಬೇಕು ಎಂದು ಹೇಳಿ ರಾಹುಲ್ ಹೇಳಿಕೆಗೆ ತಿರುಗೇಟು ನೀಡಿದರು.



