August 30, 2026
Sunday, August 30, 2026
spot_img

ಅಕಾಲಿಕ ಮಳೆ ಎಫೆಕ್ಟ್: ಹೂ ಬೆಳೆಗಳಿಗೆ ತೀವ್ರ ಹಾನಿ, ಕಣ್ಣೀರಿಡುತ್ತಿರುವ ಬೆಳೆಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಬ್ಬದ ಸೀಸನ್‌ನಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಅಕಾಲಿಕ ಮಳೆ ದೊಡ್ಡ ಆಘಾತ ತಂದಿದೆ. ಕಳೆದ ಕೆಲ ದಿನಗಳಲ್ಲಿ ಸುರಿದ ಮಳೆಯಿಂದ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹೂ ಬೆಳೆಗಳು ಹಾನಿಗೊಳಗಾಗಿ, ರೈತರು ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ.

ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆದ ಚಂಡು ಹೂ, ಸೇವಂತಿಗೆ ಮತ್ತು ಮಲ್ಲಿಗೆ ಬೆಳೆಗಳು ಮಳೆಯಿಂದ ಕೊಳೆತು ಹಾಳಾಗಿವೆ. ಈ ಹೂಗಳನ್ನು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಸಾಗಾಟ ಮಾಡಲಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಬೆಳೆದಿದ್ದ ರೈತರು ಯುಗಾದಿ ಹಬ್ಬದ ವೇಳೆ ಉತ್ತಮ ಆದಾಯದ ನಿರೀಕ್ಷೆಯಲ್ಲಿ ಇದ್ದರು.

ಇದನ್ನೂ ಓದಿ:

ಆದರೆ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂಗಳ ಗುಣಮಟ್ಟ ಕುಸಿದಿದ್ದು, ಮಾರುಕಟ್ಟೆಯಲ್ಲಿ ಬೆಲೆಗಳು ತೀವ್ರವಾಗಿ ಇಳಿಕೆಯಾಗಿವೆ. ಮಲ್ಲಿಗೆ ಮತ್ತು ಚಂಡು ಹೂಗಳ ಬೆಲೆ ಅರ್ಧಕ್ಕಿಂತ ಕಡಿಮೆಯಾಗಿದ್ದು, ರೈತರು ನಷ್ಟದಲ್ಲೇ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೊಂದೆಡೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಿಂದ ಬೆಳೆ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ, ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡುವಂತೆ ಒತ್ತಾಯಗಳು ಕೇಳಿಬಂದಿವೆ. ಒಟ್ಟಾರೆ, ಅಕಾಲಿಕ ಮಳೆ ರೈತರ ಬದುಕಿನ ಮೇಲೆ ದೊಡ್ಡ ಪರಿಣಾಮ ಬೀರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !