ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ತಿ ವಿಚಾರವಾಗಿ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.
ಸಿದ್ದೇಶ್ (36) ಕೊಲೆಯಾದ ವ್ಯಕ್ತಿ. ಅವಿವಾಹಿತರಾಗಿದ್ದ ಸಿದ್ದೇಶ್, ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಅವರ ಸಹೋದರ ಸತೀಶ್ ಮದುವೆಯಾಗಿದ್ದು, ಪತ್ನಿ ಮತ್ತು ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಸಿದ್ದೇಶ್ ಕುಡಿದು ಪ್ರತಿದಿನ ಸತೀಶ್ ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದ.
ಆಸ್ತಿಯಲ್ಲಿ ಪಾಲು ನೀಡುವಂತೆ ಸಿದ್ದೇಶ್ ಶುಕ್ರವಾರ ಸಂಜೆ ಗಲಾಟೆ ಸೃಷ್ಟಿಸಿದ್ದರು. ಹೊಡೆದಾಟ ಹಿಂಸಾಚಾರಕ್ಕೆ ತಿರುಗಿದ್ದು, ಸತೀಶ್ ದೊಣ್ಣೆಯಿಂದ ಹೊಡೆದಿದ್ದಾರೆ. ಸಿದ್ದೇಶ್ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಸ್ಥಳೀಯರು ಹೊಸದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಸಿದ್ದೇಶ್ ಮೃತಪಟ್ಟಿದ್ದಾರೆ.
ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸತೀಶ್ನನ್ನು ಬಂಧಿಸಲಾಗಿದೆ.