ಹೊಸದಿಗಂತ ವರದಿ,ಮಂಡ್ಯ:
ನಗರದ ಸುತ್ತಮುತ್ತ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆ ನಿರ್ಮಿಸುವುದು, ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ನಗರಸಭೆ ವ್ಯಾಪ್ತಿಗೆ ಒಳಪಡಿಸುವ ಕುರಿತಂತೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಬೇಕು. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಎಂ.ಶ್ರೀನಿವಾಸ್ ಅವರು ಮನವಿ ಮಾಡಿದ್ದಾರೆ. ಅದರಂತೆ ಕೆಲಸ ನಿರ್ವಹಿಸಲಾಗುವುದು. ಕೆಲವು ಹಳ್ಳಿಗಳು ನಗರಕ್ಕೆ ಹೊಂದಿಕೊಂಡಂತಿದ್ದು, ಅಂಥ ಗ್ರಾಮಗಳು ಇನ್ನೂ ನಗರಸಭೆ ಅಥವಾ ಗ್ರಾಮಕ್ಕೆ ಒಳಪಡುವ ಗೊಂದಲದಲ್ಲಿವೆ ಎಂಬ ಮಾಹಿತಿ ಬಂದಿದೆ. ಅದನ್ನು ಸರಿಪಡಿಸುವಂತೆ ಆಯುಕ್ತರಿಗೆ ಹಾಗೂ ಮೂಡಾ ಅಧ್ಯಕ್ಷರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ನಗರದ ಅಭಿವೃದ್ಧಿಗೆ ಅನುದಾನ :
ನಗರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು. ಪ್ರಸ್ತುತ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.