ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದುರಾಗಿದೆ. ವಿರೋಧಗಳ ನಡುವಲ್ಲಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತಿವೆ. ಇದಕ್ಕಾಗಿ ಸಂಸ್ಕರಿಸಿದ ನೀರನ್ನು ಬಳಕೆ ಮಾಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವರದಿ ಕೇಳಿದೆ.
ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟಿನ ನಡುವೆಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡಾಂಗಣದಲ್ಲಿ ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಆದೇಶಿಸಿದೆ.
ಪೀಠದ ಮುಖ್ಯಸ್ಥ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ತಜ್ಞ ಸದಸ್ಯ ಎ.ಸೆಂಥೊಲ್ ವೇಲ್ ಅವರನ್ನು ಒಳಗೊಂಡ ಪೀಠವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮನವಿಯ ಆಧಾರದಲ್ಲಿ ಕಬ್ಬನ್ ಉದ್ಯಾನದ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಸಂಸ್ಕರಿಸಿದ ನೀರನ್ನು ಕ್ರೀಡಾಂಗಣಕ್ಕೆ ಸರಬರಾಜು ಮಾಡಲು ಜಲಮಂಡಳಿ ಅನುಮತಿ ನೀಡಿದೆ.