ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿದು ಎಂಟು ಮಂದಿ ಸಾವನ್ನಪ್ಪಿದರುವ ದುರಂತ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, 11 ಮಂದಿ ಸುರಕ್ಷಿತವಾಗಿ ಬದುಕುಳಿದಿದ್ದಾರೆ. ಆದಾಗ್ಯೂ, ನಾಲ್ಕರಿಂದ ಐದು ಕುಟುಂಬ ಇನ್ನೂ ನಾಪತ್ತೆಯಾಗಿದ್ದು, ಅವಶೇಷಗಳಡಿ ಸಿಲುಕಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅವರಿಗಾಗಿ ಹುಡುಕಾಟ ನಡೆದಿದೆ. ಮತ್ತೊಂದೆಡೆ ಕೋಲ್ಡ್ ಸ್ಟೋರೇಜ್ ಘಟನೆಗೆ ಕಾರಣರಾದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂದ್ದು, ಅವರಿಗಾಗಿ ಶೋಧ ನಡೆಯುತ್ತಿದೆ.
ಯುಪಿಯ ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದ ಇಸ್ಲಾಂನಗರ ರಸ್ತೆಯಲ್ಲಿರುವ ಖಾಸಗಿ ಕೋಲ್ಡ್ ಸ್ಟೋರೇಜ್ನಲ್ಲಿ ಈ ಘಟನೆ ನಡೆದಿದೆ. ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿಯ ಕುಸಿದ ಭಾಗವನ್ನು ಮೂರು ತಿಂಗಳ ಹಿಂದೆ ನಿರ್ಮಿಸಲಾಗಿದೆ. ಆದರೆ, ಅದರ ನಿರ್ಮಾಣಕ್ಕೆ ಯಾವುದೇ ಅನುಮತಿ ಪಡೆದಿಲ್ಲ. ಮೊರಾದಾಬಾದ್ ಡಿಐಜಿ ಶಲಭ್ ಮಾಥುರ್ ಅವರು ಈ ಅಪಘಾತದಲ್ಲಿ ಇದುವರೆಗೆ ಎಂಟು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. NDRF, SDRF ತಂಡಗಳು ರಕ್ಷಣಾ ಕಾರ್ಯ ಮುಂದುವರೆಸಿವೆ. ಇದುವರೆಗೆ 11 ಮಂದಿಯನ್ನು ಅವಶೇಷಗಳಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕೆಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೋನಿಯಾ ಗ್ಯಾಸ್ ಸಿಲಿಂಡರ್ಗಳನ್ನು ಕೋಲ್ಡ್ ಸ್ಟೋರೇಜ್ನಲ್ಲಿ ಇಟ್ಟಿರುವುದರಿಂದ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಹೆಚ್ಚಿನ ಕಾಳಜಿಯ ಅಗತ್ಯವಿದೆ ಎಂದು ಅಧಿಕಾರಿಗಖು ತಿಳಿಸಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಂಭಾಲ್ ಜಿಲ್ಲೆಯ ಚಂದೌಸಿಯಲ್ಲಿನ ಕೋಲ್ಡ್ ಸ್ಟೋರೇಜ್ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಗಮನ ಬಂದಿದ್ದು, ಘಟನೆಗೆ ಸಿಎಂ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ನಲ್ಲಿ ತಿಳಿಸಿದೆ.