ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನುಮಾನಾಸ್ಪದವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಖುಷಿನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಓರ್ವ ಮಹಿಳೆ ಹಾಗೂ ಐವರು ಮಕ್ಕಳು ಸೇರಿದ್ದಾರೆ. ಮಧ್ಯರಾತ್ರಿ ಈ ದಾರುಣ ಘಟನೆ ನಡೆದಿದ್ದರಿಂದ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಜಾಗೃತಗೊಂಡು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಪಘಾತದ ವಿವರ ತಿಳಿದುಕೊಂಡಿದ್ದಾರೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ರಂಕೋಳ ಪೊಲೀಸ್ ಠಾಣೆ ವ್ಯಾಪ್ತಿಯ ಉರ್ದ ಬಾಪುನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ಕುಟುಂಬಸ್ಥರು ಮನೆಯಲ್ಲಿ ಮಲಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಮನೆಯಿಂದ ಹೊರ ಬರಲು ಯತ್ನಿಸಿದರು. ಬೆಂಕಿ ವೇಗವಾಗಿ ಮನೆಯ ಸುತ್ತ ವ್ಯಾಪಿಸಿದ್ದರಿಂದ ಮನೆಯವರು ಹೊರಗೆ ಬರಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ಬೆಂಕಿಯಲ್ಲಿ ಸಜೀವ ದಹನವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮೃತದೇಹಗಳನ್ನು ಸಂಗ್ರಹಿಸಿ ಶವಾಗಾರಕ್ಕೆ ರವಾನಿಸಿದ್ದಾರೆ. ಆದರೆ, ಮನೆಯೊಳಗೆ ಬೆಂಕಿ ಹೇಗೆ ವ್ಯಾಪಿಸಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.