ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸಗುಲ್ಲಾದ ವಿಚಾರವಾಗಿ ಮದುವೆ ಮನೆಯೊಂದು ರಣರಣಗವಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಜಾವೇದ್ ಮತ್ತು ರಶೀದ್ ಎಂಬ ಸಹೋದರರಿಗೆ ಬುಧವಾರ ಸಂಜೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಬ್ಬರು ಯುವತಿಯರೊಂದಿಗೆ ವಿವಾಹ ನಡೆದಿದೆ.
ಮದುವೆ ಅಂದ ಮೇಲೆ ಭೂರಿ ಬೋಜನ ವ್ಯವಸ್ಥೆ ಮಾಡೇ ಇರುತ್ತಾರೆ. ಊಟದ ವೇಳೆ ರಸಗುಲ್ಲ ಖಾಲಿಯಾದ್ದರಿಂದ ವಧುವಿನ ಸಂಬಂಧಿಕರು ಮತ್ತು ವರನ ಸಂಬಂಧಿಕರ ನಡುವೆ ವಾಗ್ವಾದ ಪ್ರಾರಂಭವಾಯಿತು. ಗಲಾಟೆ ವಿಕೋಪಕ್ಕೆ ಹೋಗಿ ಎರಡೂ ಕಡೆಯವರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಚಾಕು ತೆಗೆದುಕೊಂಡು ಇರಿದುಕೊಂಡಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ 20 ವರ್ಷದ ಸನ್ನಿ ಎಂಬ ಯುವಕ ಮೃತಪಟ್ಟಿದ್ದಾನೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.