ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್ ಕ್ಯಾಬಿನೆಟ್ ಸಚಿವ ಚಂದನ್ ರಾಮದಾಸ್ (65) ಬುಧವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬಾಗೇಶ್ವರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಚಂದನ್ ರಾಮದಾಸ್ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ. ಕ್ಯಾಬಿನೆಟ್ನಲ್ಲಿ ನನ್ನ ಹಿರಿಯ ಸಹೋದ್ಯೋಗಿ ಚಂದನ್ ಸಾವು ನನಗೆ ಆಘಾತವನ್ನುಂಟು ಮಾಡಿದೆ. ಅವರ ನಿಧನ ಸಾರ್ವಜನಿಕ ಸೇವೆ ಮತ್ತು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಚಂದನ್ ರಾಮ್ ದಾಸ್ ನಿಧನಕ್ಕೆ ಬಿಜೆಪಿ ನಾಯಕರು ಹಾಗೂ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 26 ರಿಂದ 28 ರವರೆಗೆ ಶೋಕಾಚರಣೆಯನ್ನು ಘೋಷಿಸಿದೆ. ಉತ್ತರಾಖಂಡ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕರಾಗಿದ್ದ ಚಂದನ್ ರಾಮ್ ದಾಸ್ 1997 ರಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಆ ವರ್ಷದ ಪುರಸಭೆಯ ಮೊದಲ ಚುನಾವಣೆಯಲ್ಲಿ ಬಾಗೇಶ್ವರದಿಂದ ಗೆದ್ದರು. ನಗರಸಭೆಯ ಸ್ವತಂತ್ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
2006ರಲ್ಲಿ ಬಿಜೆಪಿ ಸೇರಿದರು. 2007, 2012, 2017 ಮತ್ತು 2022ರ ವಿಧಾನಸಭೆ ಚುನಾವಣೆಯಲ್ಲಿ ಸತತವಾಗಿ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾಗೇಶ್ವರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 14,567 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.