ವರುಣನ ಆರ್ಭಟ: ರಾಜ್ಯಾದ್ಯಂತ ಒಂದೇ ದಿನ 3 ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ರಾಜ್ಯದಲ್ಲಿ ಭಾರೀ ಮಳೆಗೆ ಬೆಂಗಳೂರು, ಚಿಕ್ಕಮಗಳೂರು ಹಾಗೂ ಕೊಪ್ಪಳದಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಕೊಪ್ಪಳದಲ್ಲಿ ಸಿಡಿಲು ಬರಿದು ಯುವಕ, ಬೆಂಗಳೂರಿನ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಕಾರು ಮುಳುಗಿ ಯುವತಿ ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಮಳೆಗೆ 5 ಮರಗಳು ಬಿದ್ದು ಮೂವರು ದುರಂತ ಸಾವನ್ನಪ್ಪಿದ್ದಾರೆ.

ಮುಂಗಾರು ಮಳೆ ಆಗಮಿಸುವ 10 ದಿನ ಮೊದಲೇ ಮುಂಗಾರು ಪೂರ್ವ ಮಳೆಯ ಅಬ್ಬರ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿದೆ. ಆದರೆ, ಈ ಮಹಾಮಳೆಗೆ ವಿವಿಧೆಡೆ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿವೆ.

ಕೊಪ್ಪಳದಲ್ಲಿ ಸಿಡಿಲಿಗೆ ಯುವಕ ಬಲಿ:

ಭಾನುವಾರ ಮಧ್ಯಾಹ್ನ ಸುರಿದ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಮಿಶ್ರಿತ ಮಹಾಮಳೆಗೆ ಕೊಪ್ಪಳ ತಾಲೂಕಿನ ಶಿವಪುರದಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾರೆ. ಮೃತ ಬಾಲಕನನ್ನು ಶ್ರೀಕಾಂತ ದೊಡ್ಡನಗೌಡ್ರ ಮೇಟಿ (16) ಎಂದು ಗುರುತಿಸಲಾಗಿದೆ.

ಮಲೆನಾಡಲ್ಲಿ ಬಲಿ:
ಮುಂಗಾರು ಪೂರ್ವ ಮಳೆಗೆ ಮಲೆನಾಡಿನಲ್ಲಿ ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವಯಕ್ತಿಯ ಮೇಲೆ ಬೃಹತ್‌ ಮರ ಬಿದ್ದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ವೇಣುಗೋಪಾಲ್ (45) ಎಂದು ಗುರುತಿಸಲಾಗಿದೆ. ಚಿಕ್ಕಹಳ್ಳ ಗ್ರಾಮದಲ್ಲಿ ಹೋಮ್‌ ಸ್ಟೇ ನಡೆಸುತ್ತಿದ್ದ ವೇಣುಗೋಪಾಲ್, ಅಲ್ಲಿಂದ ಬರುವಾಗ ಮರ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ನೀರಲ್ಲಿ ಕಾರು ಮುಳುಗಿ ಯುವತಿ ಸಾವು:

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ 6 ಮಂದಿ ಕುಟುಂಬ ಸದಸ್ಯರು ಕಾರಿನಲ್ಲಿ ಹೋಗುವಾಗ ಕೆ.ಆರ್. ವೃತ್ತದ ಬಳಿ ಅಂಡರ್‌ಪಾಸ್‌ನಲ್ಲಿ ನೀರು ಸಂಗ್ರಹವಾಗಿದೆ. ಇನ್ನು ಕಾರು ಅಂಡರ್‌ಪಾಸ್‌ ದಾಟುವಾಗ ಆಫ್‌ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಹೆಚ್ಚಿನ ನೀರು ಸಂಗ್ರಹಗೊಂಡು ಕಾರು ಮುಳುಗಿದೆ. ಕಾರಿನ ಬಾಗಿಲು ತೆಗೆಯಲು ಸಾಧ್ಯವಾಗದೇ ಎಲ್ಲರೂ ಕಿರುಚಾಡಿದ್ದಾರೆ. ಆಗ, ಕಾರಿನೊಳಗೆ ನೀರು ಕೂಡ ನುಗ್ಗಿದ್ದು, ಯುವತಿ ಭಾನುರೇಖಾ (22) ಎಂಬ ಯುವತಿ ನೀರು ಸೇವಿಸಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಾ ಗಂಭೀರ ಸ್ಥಿತಿ ತಲುಪಿದ್ದಳು. ಸ್ಥಳೀಯರ ಸಹಾಯದಿಂದ ಅವರನ್ನು ರಕ್ಷಣೆ ಮಾಡಲಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಆಸ್ಪತ್ರೆ ಸಿಬ್ಬಂದಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ತೋರಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!