ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮಧ್ಯಾಹ್ನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಣೆ ಮಾಡಿದೆ.
ಇಂದು ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೆಹಲಿಯಲ್ಲಿ ಹಬ್ಬದ ಆಚರಣೆಗಾಗಿ ಹೊರಬಂದಿದ್ದ ಸಾರ್ವಜನಿಕರು ಈ ದಿಢೀರ್ ಮಳೆಗೆ ಸಿಲುಕಿ ಪರದಾಡುವಂತಾಗಿದೆ. ರಸ್ತೆಗಳ ಉದ್ದಕ್ಕೂ ಛತ್ರಿ ಹಿಡಿದು ಜನರು ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.
ಮುಂದಿನ ಕೆಲವು ಗಂಟೆಯ ಹವಾಮಾನ ಹೇಗಿರಲಿದೆ?
ಸಂಜೆ 5 ರಿಂದ ರಾತ್ರಿ 8 ರವರೆಗೆ ದೆಹಲಿಯ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ, ಗುಡುಗು ಮತ್ತು ಮಿಂಚಿನ ಆರ್ಭಟ ಮುಂದುವರಿಯಲಿದೆ. ಕೆಲವು ಪ್ರದೇಶಗಳಲ್ಲಿ 50 ರಿಂದ 100 ಮಿಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ತೀವ್ರ ಗಾಳಿ ಬೀಸಲಿದ್ದು, ಇದು ಕೆಲವೊಮ್ಮೆ ಗಂಟೆಗೆ 60 ಕಿಲೋಮೀಟರ್ ವೇಗವನ್ನು ಪಡೆದುಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇದನ್ನೂ ಓದಿ:
ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಳ್ಳುತ್ತಿದ್ದು, ವಾಹನ ಸವಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಹಬ್ಬದ ಪ್ರಯುಕ್ತ ಸಾರ್ವಜನಿಕರು ಮಾರುಕಟ್ಟೆ ಹಾಗೂ ದೇವಸ್ಥಾನಗಳಿಗೆ ತೆರಳುವ ಮುನ್ನ ಹವಾಮಾನದ ಅಪ್ಡೇಟ್ಗಳನ್ನು ಗಮನದಲ್ಲಿಟ್ಟುಕೊಳ್ಳಲು ಕೋರಲಾಗಿದೆ.



