ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೇಸಿಗೆಯ ತಾಪ ಏರುತ್ತಿರುವ ಬೆನ್ನಲ್ಲೇ ಮಳೆರಾಯ ಅನಿರೀಕ್ಷಿತ ಎಂಟ್ರಿ ಕೊಟ್ಟಿದ್ದಾನೆ. ಕೋಲಾರ, ಚಿಕ್ಕಮಗಳೂರು, ಹಾವೇರಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಒಂದು ಕಡೆ ತಂಪು ನೀಡಿದ್ದರೆ, ಮತ್ತೊಂದೆಡೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಸಿಲಿಕಾನ್ ಸಿಟಿಯ ಮಲ್ಲೇಶ್ವರಂ, ಮೆಜೆಸ್ಟಿಕ್, ಹೈಗ್ರೌಂಡ್ಸ್ ಹಾಗೂ ಫ್ರೀಡಂ ಪಾರ್ಕ್ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಸಂಕಷ್ಟಕ್ಕೀಡಾಗಿದ್ದು, ಮುಂದಿನ ಕೆಲವು ಗಂಟೆಗಳ ಕಾಲ ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.
ಕೋಲಾರ ಮತ್ತು ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗಿದ್ದು, ಒಣಗಿದ್ದ ಭೂಮಿ ತಂಪಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕಾಫಿನಾಡಿನಲ್ಲಿ ಮಳೆಗಿಂತ ಗಾಳಿಯ ವೇಗವೇ ಹೆಚ್ಚಾಗಿತ್ತು. ಹುಕ್ಕುಂದ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಕೊಟ್ಟಿಗೆ ಹಾಗೂ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದು, ಜನರಲ್ಲಿ ಭೀತಿ ಮೂಡಿಸಿದೆ.



