ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ, ‘ಲೀಲಾವತಿ ಅವರು ಎಷ್ಟೇ ಕಷ್ಟದಲ್ಲಿದ್ದರೂ ಸರ್ಕಾರದ ಸಹಾಯ ಕೇಳಿರಲಿಲ್ಲ’ ಎಂದರು.
‘ನಮ್ಮ ಕಾಲದಲ್ಲಿ ರಾಜ್ಕುಮಾರ್ – ಲೀಲಾವತಿ ಜೋಡಿ ಜನಪ್ರಿಯವಾಗಿತ್ತು. ವಿದ್ಯಾರ್ಥಿಯಾಗಿದ್ದಾಗ ಅವರ ಸಿನಿಮಾಗಳನ್ನು ನೋಡುತ್ತಿದ್ದೆ. ಲೀಲಾವತಿ ನಟಿಸಿದ್ದ ‘ಕುಲವಧು’ ಸಿನಿಮಾ ಇಷ್ಟವಾಗಿತ್ತು. ಲೀಲಾವತಿ ಪರಿಪೂರ್ಣ ಕಲಾವಿದೆ’ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಲೀಲಾವತಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ನಾನೊಬ್ಬನೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ’ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಿರಿಯ ನಟ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.