ಪಶು ವಿವಿ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಪ್ರಭು ಚವ್ಹಾಣ್

ಹೊಸದಿಗಂತ ವರದಿ,ಬೀದರ್ :

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜನವರಿ 17ರಂದು ಜರುಗಿದ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನ್ಯಾಯವಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಪ್ರಗತಿ ಕೆಲಸಗಳಾಗುತ್ತಿವೆ. ವಿವಿ ಆವರಣದಲ್ಲಿ ಆಡಳಿತ ಭವನ ನಿರ್ಮಾಣಕ್ಕಾಗಿ 25 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂಬರುವ ಆಯವ್ಯಯದಲ್ಲಿ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಅವಶ್ಯಕತೆಯಿರುವ ಬೇಡಿಕೆಗಳನ್ನು ಲಿಖಿತವಾಗಿ ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ತಿಳಿಸಿದರು.

ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅಥಣಿ ಕಾಲೇಜಿಗೆ 30 ಕೋಟಿ ಅನುದಾನ ನೀಡಲಾಗಿದೆ. ಹೀಗೆ ವಿವಿ ವ್ಯಾಪ್ತಿಯಲ್ಲಿರುವ ಎಲ್ಲ ಕಾಲೇಜುಗಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಿದೆ ಎಂದು ಸಚಿವರು ಹೇಳಿದರು.

ನಮ್ಮ ದೇಶ ಕೃಷಿ ಪ್ರಧಾನ ದೇಶ. ಜಾನುವಾರುಗಳು ರೈತರ ಆರ್ಥಿಕತೆಗೆ ಬೆನ್ನೆಲುಬಿನಂತೆ ಕೆಲಸ ಮಾಡುತ್ತವೆ. ಹಾಗೆಯೇ ಗೋವುಗಳಿಗೆ ಪವಿತ್ರ ಸ್ಥಾನಮಾನ ನೀಡಲಾಗಿದೆ. ಗೋವನ್ನು ಮಾತೆಯೆಂದು ಪೂಜಿಸಲಾಗುತ್ತದೆ. ಇಂತಹ ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುವುದನ್ನು ತಪ್ಪಿಸಿ ಜಾನುವಾರುಗಳ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಡಿ ಈವರೆಗೆ 35 ಸಾವಿರ ಗೋವುಗಳನ್ನು ಸಂರಕ್ಷಿಸಿ ಸುಮಾರು 3 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

ಮೂಕ ಪ್ರಾಣಿಗಳು ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ತುರ್ತಾಗಿ ಆರೋಗ್ಯ ಸೇವೆ ಸಿಗುವಂತಾಗಲು ಪಶು ಸಂಜೀವಿನಿ ಆಂಬ್ಯುಲೆನ್ಸ್ ಗಳನ್ನು ಬಿಡುಗಡೆ ಮಾಡಲಾಗಿದೆ. ಜಾನುವಾರು ಸಾಕುವ ರೈತರು ಮತ್ತು ಜಾನುವಾರು ಸಾಕಣೆದಾರರಿಗೆ ಮಾರ್ಗದರ್ಶನ ಮತ್ತು ಸೇವೆ ನೀಡಲು ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಒಂದು ಕಾಲದಲ್ಲಿ ಅಪರಿಚಿತವಾಗಿದ್ದ ಪಶು ಸಂಗೋಪನೆ ಇಲಾಖೆಯನ್ನು ನಾನು ಪಶು ಸಂಗೋಪನೆ ಇಲಾಖೆಯ ಸಚಿವನಾದ ನಂತರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಇಲಾಖೆಯನ್ನು ಜನಸ್ನೇಹಿಯಾಗಿಸಲಾಗುತ್ತಿದೆ. ದೇಶಾದ್ಯಂತ ಜಾನುವಾರುಗಳಿಗೆ ಕಾಡಿದ್ದ ಲಿಂಪಿಸ್ಕಿನ್ ರೋಗವನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ತಡೆಯಲು ಲಸಿಕಾಕರಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸರಿಯಾಗಿ ವ್ಯಾಸಂಗ ಮಾಡಬೇಕು. ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಪೋಷಕರಿಗೆ ಮೋಸವಾಗದ ರೀತಿಯಲ್ಲಿ ಪ್ರಯತ್ನ ನಡೆಸಬೇಕು. ವಿದ್ಯಾಭ್ಯಾಸದ ನಂತರ ಸಮಾಜ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾರ್ಯದರ್ಶಿ ಡಾ.ವಿನೋದ ಭಟ್ ಅವರು ಮಾತನಾಡಿ, ಜಾನುವಾರು ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯ ಜಾನುವಾರು ಸಾಕಾಣ ಕೆದಾರರು ಮತ್ತು ರೈತರ ಏಳಿಗೆಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ವಸಂತ ಬಿರಾದಾರ, ಕವಿತಾ ಮಿಶ್ರಾ, ಡಾ.ದೀಪಕ ದೊಡಯ್ಯಾ, ಡಾ.ಯತೀಂದ್ರ.ಎಸ್ ಅವರು ಮಾತನಾಡಿದರು. ವಿವಿ ಕುಲಸಚಿವರಾದ ಶಿವಶಂಕರ.ಎಸ್ ಅವರು ಶೈಕ್ಷಣಿಕ ವರದಿ ಮಂಡಿಸಿದರು. ವಿವಿ ಕುಲಪತಿಗಳಾದ ಪ್ರೊ.ಕೆ.ಸಿ ವೀರಣ್ಣ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಾ.ಎನ್.ಎಂ ದಿನೇಶ, ಭೋಜನಾಯಕ, ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಕೆ ಸತ್ಯನಾರಾಯಣ, ವಿಶ್ವವಿದ್ಯಾಲಯದ ಡಾ.ಬಿ.ವಿ ಶಿವಪ್ರಕಾಶ, ಡಾ.ದಿಲೀಪಕುಮಾರ, ಡಾ.ಎನ್ ಪ್ರಕಾಶ, ಡಾ.ಎನ್.ಎ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಪಶುವೈದ್ಯಕೀಯ ಕಾಲೇಜಿನ ಡಾ.ಶ್ರೀಕೃಷ್ಣ ಇಸ್ಲೂರ್ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಸಂಜೀವಕುಮಾರ ಬಸಪ್ಪ ಅವರಿಗೆ ಶ್ರೇಷ್ಟ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಶೋಧಕರು ಮತ್ತು ವಿವಿಯ ಸಾಧಕ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!