ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ. ಸಂಸತ್ ಭವನದಲ್ಲಿ ಶನಿವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದ್ದು, ಈ ಕ್ರಮದಲ್ಲಿ ಚುನಾವಣಾ ಪ್ರಕ್ರಿಯೆ ಮೂಲಕ ನೂತನ ಉಪರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಹಾಗೂ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಕಣಕ್ಕಿಳಿದಿದ್ದಾರೆ.
ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಬಳಿಕ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಸಂಸತ್ತಿನ ಎರಡೂ ಸದನಗಳ ಸದಸ್ಯರು ನೂತನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ. ಉಭಯ ಸದನಗಳಲ್ಲಿ ಪ್ರಸ್ತುತ ಸದಸ್ಯರ ಸಂಖ್ಯೆ 788ಇದ್ದು, ಗೆಲ್ಲಲು 390ಕ್ಕೂ ಹೆಚ್ಚು ಮತಗಳ ಅಗತ್ಯವಿದೆ. ಚುನಾಯಿತ ಉಪರಾಷ್ಟ್ರಪತಿ ಇದೇ ತಿಂಗಳ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವಿನ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಾರ್ಗರೆಟ್ ಆಳ್ವಾ ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ