ಹೊಸದಿಗಂತ ವರದಿ ಹುಬ್ಬಳ್ಳಿ:
ಕಿತ್ತೂರ ಕರ್ನಾಟಕ ಭಾಗದಲ್ಲಿ ಕಳೆದ ಬಾರಿಗಿಂತ ಈ ಸಾರಿ ಅಧಿಕ ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಜೀವ ಬೆದರಿಕೆ ಆಡಿಯೊಗೆ ಸಂಬಂಧಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಲು ಸೂಚಿಸಿದ್ದೇನೆ ಬಳಿಕ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದರು.
ಪ್ರಧಾನಿ ಮೋದಿ ಪ್ರಚಾರಕ್ಕಾಗಿ ಇಂದು ಹಾವೇರಿಗೆ ಬರುತ್ತಾರೆ. ಅವರು ಬಂದರೆ ಬಿಜೆಪಿ ಪರವಾಗಿ ಬಹಳ ದೊಡ್ಡ ಅಲೆ ಬರಲಿದೆ. ಧಾರವಾಡ, ಹಾವೇರಿ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.
ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಪಕ್ಷದ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದಾರೆ ಇದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.
ನಟ ಶಿವರಾಜಕುಮಾರ ಅವರು ಪ್ರಚಾರ ಮಾಡುತ್ತಿರುವುದರ ಬಗ್ಗೆ ಬಿಜೆಪಿ ಟ್ರೋಲ್ ಮಾಡುತ್ತಿಲ್ಲ. ಪ್ರತಾಸಿಂಹ ಶಿವರಾಜ ಕುಮಾರ್ ಬಗ್ಗೆ ಮಾತನಾಡಿದ್ದು, ಅವರ ಸಂಬಂಧಗಳಿಗೆ ಬಿಟ್ಟಿದ್ದು. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲಿ ಪ್ರತಿಯೊಬ್ಬರಿಗೂ ಸ್ವತಂತ್ರವಿದೆ. ನಟ ಶಿವರಾಜಕುಮಾರ್ ಯಾರದೋ ಪರವಾಗಿ ಪ್ರಚಾರ ಮಾಡಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಬಿ.ಎಲ್. ಸಂತೋಷ್ ಅವರ ಲಿಂಗಾಯತರ ಮತ ಬೇಡಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ದೂರು ದಾಖಲಿಸಿದ್ದೇವೆ ಎಂದು ಹೇಳಿದರು.