ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಜಯ ಸಂಕಲ್ಪವು ವಿಜಯ ಪಥವಾಗಿ ವಿಜಯೋತ್ಸವಕ್ಕೆ ದಾರಿ ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಪದ್ಮನಾಭನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ಬಿಜೆಪಿ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರ ಪಡೆಯುವುದು ಅಷ್ಟೇ ಸತ್ಯ ಎಂದರು.
ರಾಜ್ಯದಲ್ಲಿ ಬಿಜೆಪಿ ಕಮಲ ಅರಳಲಿದೆ. ವಿಧಾನಸಭೆಯ ಮೂರನೇ ಮಹಡಿಯಲ್ಲಿ ಮತ್ತೊಮ್ಮೆ ಆ ಭುವನೇಶ್ವರಿಯ ಸೇವೆ ಮಾಡಲು ಬಿಜೆಪಿಗೆ ಜನರ ಆಶೀರ್ವಾದ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಅಶೋಕ್ ಅವರು ಈ ಬಾರಿ ಒಂದು ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುವರೆಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಮನೆಮನೆಗೆ ಹೋಗಿ ಕೇಂದ್ರ- ರಾಜ್ಯ ಸರಕಾರಗಳ ಜನಪರ ಕೆಲಸದ ಮಾಹಿತಿ ಕೊಡಬೇಕು. ಜನಮನವನ್ನು ಗೆದ್ದು ಪಕ್ಷ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.