ಹೊಸದಿಗಂತ ವರದಿ ಕಲಬುರಗಿ:
ಆಳಂದದ ರಾಘವ ಚೈತನ್ಯ ಮಂದಿರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದೆ.ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೀಸಲಾತಿ ಹಾಗೂ ಶಿಕ್ಷಣ ವಿಚಾರದಲ್ಲೂ ಟೀಕೆ
ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದ್ದು, ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ.ಮೀಸಲಾತಿ ವಿಚಾರದಲ್ಲಿ ಸರ್ಕಾರ ಗೊಂದಲ ಸೃಷ್ಟಿಸುತ್ತಿದ್ದು, ಲಕ್ಷಾಂತರ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಇದನ್ನೂ ಓದಿ:
ಸಮವಸ್ತ್ರ ನೀತಿ ಮತ್ತು ಹಿಜಾಬ್ ಕುರಿತ ಸರ್ಕಾರದ ಆದೇಶಗಳ ಬಗ್ಗೆ ಮಾತನಾಡಿದ ವಿಜಯೇಂದ್ರ, ಶಾಲೆ-ಕಾಲೇಜು ವಿದ್ಯಾರ್ಥಿಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷದ ವಾತಾವರಣ ನಿರ್ಮಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಆದರೂ ರಾಜ್ಯದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.ಸರ್ಕಾರದ ನಿರ್ಧಾರಗಳ ವಿರುದ್ಧ ಬಿಜೆಪಿ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ರೂಪಿಸಲಿದೆ ಎಂದು ವಿಜಯೇಂದ್ರ ತಿಳಿಸಿದರು.



