ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ನಗರದ ಚವ್ಹಾಟ್ ಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಭೇಟಿ ನೀಡಿ, ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೂ ತಂದು, ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:
ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಭಾಗವಹಿಸಲು ಮುತಗಾದಿಂದ ಬಳ್ಳಾರಿಗೆ ತೆರಳಲು ಸಜ್ಜಾಗಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಿಂದ ಮೃತಪಟ್ಟ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿವಂಗತ ಮಹಾವೀರ ಗುಡಾಜ ಅವರ ಮುತಗಾ ನಿವಾಸಕ್ಕೆ ಭೇಟಿ ನೀಡಿ ಮೃತ ಕಾರ್ಯಕರ್ತರನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ದುಃಖದಲ್ಲಿ ಕುಟುಂಬದೊಂದಿಗೆ ಪಕ್ಷ ನಿಲ್ಲಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಅನಿಲ ಬೆನಕೆ, ಸಂಜಯ ಪಾಟೀಲ, ಅರವಿಂದ ಪಾಟೀಲ, ಗೀತಾ ಸುತಾರ, ಮುರುಘೇಂದ್ರ ಗೌಡ ಪಾಟೀಲ, ರವಿ ಪಾಟೀಲ, ಯುವರಾಜ್ ಜಾಧವ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.



