ಹೊಸದಿಗಂತ ವರದಿ ಧಾರವಾಡ:
ಸುದೀರ್ಘ ವಿರಾಮದ ಬಳಿಕ ಧಾರವಾಡದ ತಮ್ಮ ನಿವಾಸಕ್ಕೆ ಆಗಮಿಸಿದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ, ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರು ತೋರಿದ ಪ್ರೀತಿಗೆ ಭಾವುಕರಾಗಿ ಋಣ ಸಂದಾಯದ ಮಾತುಗಳು ಆಡಿದ್ದಾರೆ.
ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಇಂದು ನನಗೆ ಅತ್ಯಂತ ಸಂತೋಷವಾಗಿದೆ. ನನ್ನ ಕ್ಷೇತ್ರದಲ್ಲಿ ನಾನು ಇಲ್ಲದಿದ್ದಾಗಲೂ ಕ್ಷೇತ್ರದ ಹಾಗೂ ಧಾರವಾಡ ಜಿಲ್ಲೆಯ ಜನತೆ ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು. ನನ್ನ ಅನುಪಸ್ಥಿತಿಯಲ್ಲಿ ನನ್ನ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತು ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾನು ಚಿರಋಣಿ ಎಂದು ಧನ್ಯವಾದ ಸಮರ್ಪಿಸಿದರು.
ಕಾರ್ಯಕರ್ತರ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಶಾಸಕರು, ನಾನು ಕ್ಷೇತ್ರದಲ್ಲಿ ಇಲ್ಲದ ಸಮಯದಲ್ಲೂ ನನ್ನ ಕಾರ್ಯಕರ್ತರು, ಬೆಂಬಲಿಗರು ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಶ್ರಮದಿಂದಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಯಶಸ್ವಿಯಾಗಿ ನೆರವೇರಿವೆ ಎಂದರು. ನನ್ನ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸಕ್ಕೆ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕವೇ ಋಣ ತೀರಿಸುತ್ತೇನೆ ಎಂದು ಭರವಸೆ ನೀಡಿದರು.



