January20, 2026
Tuesday, January 20, 2026
spot_img

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ: ಹಿಂದು ಯುವಕನ್ನು ಥಳಿಸಿ, ಸುಟ್ಟು ಹಾಕಿದ ಪಾಪಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲ್ಲಾದಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ನಡೆದ ಗುಂಪು ಹಲ್ಲೆಯಲ್ಲಿ ಹಿಂದು ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ.

ವಿಪಕ್ಷ ನಾಯಕ ಷರೀಫ್ ಉಸ್ಮಾನ್ ಹಾದಿ ಕೊಲೆ ಬಳಿಕ ನಂತರ ದೇಶಾದ್ಯಂತ ವ್ಯಾಪಕ ಹಿಂಸಾಚಾರ ಮತ್ತು ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಸ್ಥಳೀಯರ ಗುಂಪೊಂದು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದೆ.

ಹೊಡೆದು ಕೊಂದ ಜನ
ಗುಂಪು ದೀಪು ಚಂದ್ರ ದಾಸ್ ಅವರನ್ನು ಹೊಡೆದು ಕೊಂದು, ನಂತರ ಅವರ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದೆ ಎಂದು ಆರೋಪಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಶವವನ್ನು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಕರಣದಲ್ಲಿ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಮೃತರ ಕುಟುಂಬವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Must Read