ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಜೋಡೊ ನ್ಯಾಯ ಯಾತ್ರೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜ್ಯ ಪೊಲೀಸರು ಸಮನ್ಸ್ ಜಾರಿ ಮಾಡಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನೋಟಿಸ್ ನೀಡಲಾಗುವುದು.ರಾಹುಲ್ ಖುದ್ದಾಗಿ ಹಾಜರಾಗಲು ಸೂಚಿಸಲಾಗುವುದು ಎಂದು ಅವರು ತಿಳಿಸಿದರು.
ಯಾರೇ ಆದರೂ ನಿಯಮ ಉಲ್ಲಂಘಿಸಿದಾಗ ನಿಸ್ಸಂಶಯವಾಗಿಯೂ ಸಮನ್ಸ್ ನೀಡಲಾಗುತ್ತದೆ. ರಾಹುಲ್ ಗಾಂಧಿ ಅವರಿಗೂ ಸಮನ್ಸ್ ನೀಡಲಾಗುವುದು ಎಂದು ಹೇಳಿದರು.
ಅಸ್ಸಾಂ ಕಾಂಗ್ರೆಸ್ ಘಟಕದ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಮತ್ತು ಕಾಂಗ್ರೆಸ್ ಶಾಸಕ ಜಾಕೀರ್ ಹುಸೇನ್ ಸಿಕ್ದರ್ ಅವರಿಗೆ ಸಮನ್ಸ್ ನೀಡಿರುವುದು ಈ ಪ್ರಕ್ರಿಯೆಯ ಭಾಗವಾಗಿದೆ ಎಂದು ಅವರು ತಿಳಿಸಿದರು.
ಜನವರಿಯಲ್ಲಿ ನಡೆದ ಭಾರತ ಜೋಡೊ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ಮುರಿದು ನಗರದ ಪ್ರಮುಖ ರಸ್ತೆಗಳಲ್ಲಿ ನುಗ್ಗಲು ಯತ್ನಿಸಿದಾಗ ಸಂಘರ್ಷ ಉಂಟಾಗಿತ್ತು. ಈ ಸಂಬಂಧ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.