ವಿವಿಧ ವಾರ್ಡ್’ಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ ಶಾಸಕ ಅಪ್ಪಚ್ಚು ರಂಜನ್

ಹೊಸದಿಗಂತ ವರದಿ, ಕೊಡಗು:

ನಗರೋತ್ಥಾನ ಯೋಜನೆಯಡಿ ಮಡಿಕೇರಿ ನಗರಸಭೆಗೆ 40 ಕೋಟಿ ರೂ. ಹಾಗೂ ಮುಖ್ಯಮಂತ್ರಿ ಅವರ ವಿಶೇಷ ಪ್ಯಾಕೇಜ್‍ನಡಿ 5 ಕೋಟಿ ರೂ. ಬಿಡುಗಡೆಯಾಗಿದ್ದು, ಇದಕ್ಕೆ ಪೂರಕ ಕ್ರಿಯಾ ಯೋಜನೆ ಅಂತಿಮಗೊಳಿಸುವಲ್ಲಿ ನಗರದ ವಿವಿಧ ವಾರ್ಡ್‌ಗಳೊಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಸಾರ್ವಜನಿಕರು ಹಾಗೂ ನಗರಸಭಾ ಸದಸ್ಯರಿಂದ ಮಾಹಿತಿ ಪಡೆದರು.
ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಸಂಸ್ಕರಣಾ ಘಟಕದ ಬಳಿ 25 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಆಗುತ್ತಿದ್ದು, ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೂಚಿಸಿದರು.
ಮಡಿಕೇರಿ ನಗರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳ ಸಂಬಂಧ ಶಾಸಕರು ಮಾಹಿತಿ ಪಡೆದರು.
ನಗರದ ಸ್ಟೋನ್ ಹಿಲ್ ರಸ್ತೆ ಮಾರ್ಗದಲ್ಲಿರುವ ‘ಬಂಟ ಸಮಾಜದ ಸ್ಮಶಾನ ಭೂಮಿಯಲ್ಲಿ ಅಭಿವೃದ್ಧಿ ಕಾರ್ಯ ಮಾಡಿಸಿಕೊಡುವಂತೆ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ಶಾಸಕರಲ್ಲಿ ಕೋರಿದರು.
ಕಾವೇರಿ ಬಡಾವಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀರು ನಿಲ್ಲುವ ಸ್ಥಳದಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡುವಂತೆ ಸದಸ್ಯ ಮಹೇಶ್ ಜೈನಿ ಅವರು ಗಮನ ಸೆಳೆದರು.
2018 ರಲ್ಲಿ ಸುರಿದ ಭಾರಿ ಮಳೆಯಿಂದ ಮುತ್ತಪ್ಪ ದೇವಸ್ಥಾನದ ಬಳಿ ಮನೆ ಜಾರಿ ಹೋಗಿದ್ದು, ಆ ಜಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ರಸ್ತೆ ಕುಸಿಯುವ ಸಾಧ್ಯತೆ ಇದೆ ಎಂದು ಮಹೇಶ್ ಜೈನಿ ಅವರು ಶಾಸಕರ ಗಮನಕ್ಕೆ ತಂದರು.
ಕನ್ನಿಕಾ ಬಡಾವಣೆ ಬಳಿ ತೋಡು/ಚರಂಡಿ ನಿರ್ಮಾಣ ಮಾಡಬೇಕು ಎಂದು ಸದಸ್ಯ ಅಪ್ಪಣ್ಣ ಅವರು ಶಾಸಕರಲ್ಲಿ ಮನವಿ ಮಾಡಿದರು.
ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮತ್ತು ಉಪಾಧ್ಯಕ್ಷೆ ಸವಿತಾ ರಾಕೇಶ್ ಅವರು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಆಗಬೇಕಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.
ನಗರೋತ್ಥಾನ ಕಾಮಗಾರಿ ಸಂಬಂಧ ಕ್ರಿಯಾಯೋಜನೆ ಅಂತಿಮಗೊಳಿಸುವ ನಿಟ್ಟಿನಲ್ಲಿ ನಗರದ ಎಲ್ಲಾ ವಾರ್ಡ್‍ಗಳಿಗೆ ಶಾಸಕರು ಭೇಟಿ ನೀಡಿದರು. ಆಯಾಯ ವಾರ್ಡ್ ಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಲದ ಸಂದರ್ಭದಲ್ಲಿ ಕೈಗಾರಿಕಾ ಬಡಾವಣೆಯ ರಸ್ತೆಯಲ್ಲಿ ಹೆಚ್ಚಾಗಿ ನೀರು ತುಂಬುವುದರಿಂದ ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆ ಆಗಲಿದ್ದು, ಈ ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಮಾಡಬೇಕಾಗಿ ಸದಸ್ಯರು ಶಾಸಕರಲ್ಲಿ ಮನವಿ ಮಾಡಿದರು.
ಸಿಸಿಟಿವಿ ಅಳವಡಿಸಿ: ಕೂಟುಹೊಳೆ ಕುಂಡಾಮೇಸ್ತ್ರಿ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಸಿಸಿಟಿವಿ ಅಳವಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರಾಯುಕ್ತ ಎಸ್.ವಿ.ರಾಮದಾಸ್, ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ ಕುಮಾರ್, ಸೌಮ್ಯ, ಒಳಚರಂಡಿ ಮಂಡಳಿಯ ಎಇಇ ವಿನಯ್, ನಗರಸಭಾ ಸದಸ್ಯರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!