ಹೊಸದಿಗಂತ ವರದಿ, ಮಡಿಕೇರಿ:
ಚುನಾವಣೆ ಸಮೀಪಿಸುತ್ತಿರುವಂತೆಯೇ ಮೂಲ ಕಾಂಗ್ರೆಸ್ಸಿಗರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಕಾಂಗ್ರೆಸ್ ಮುಂದಾಗಿದೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವವರನ್ನು ಹುಡುಕಿ ಜವಾಬ್ದಾರಿ ನೀಡಲು ಕೆಪಿಸಿಸಿ ಮುಂದಾಗಿದೆ.
ಆ ನಿಟ್ಟಿನಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್’ನ ನೂತನ ಅಧ್ಯಕ್ಷರಾಗಿ ವಿ.ಪಿ.ಶಶಿಧರ್ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಶಶಿಧರ್ ಅವರು ಈ ಹಿಂದೆಯೇ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಕಾರ್ಮಿಕ ವಿಭಾಗದ ಜಿಲ್ಲಾ ಮುಖ್ಯಸ್ಥರ ಹುದ್ದೆ ನೀಡಲಾಗಿತ್ತು. ಆದರೆ ಇದರಿಂದ ಸ್ವಲ್ಪ ಮಟ್ಟಿಗೆ ಅತೃಪ್ತರಾಗಿದ್ದ ಶಶಿಧರ್ ಪಕ್ಷದ ಚಟುವಟಿಕೆಗಳಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದರು.
ಆದರೆ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೆಪಿಸಿಸಿ ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರೊಂದಿಗೆ ಪಕ್ಷದ ಬಲವರ್ಧನೆಗೆ ಎಲ್ಲಾ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ನೂತನ ಅಧ್ಯಕ್ಷ ವಿ.ಪಿ.ಶಶಿಧರ್ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ