ಹೊಸದಿಗಂತ ವರದಿ ಚಿತ್ರದುರ್ಗ:
ಜಿಲ್ಲಾಡಳಿತದ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಬೆಳಗಾವಿ ಅಧಿವೇಶನದಲ್ಲಿ ತೆಗೆದುಕೊಂಡ ಐತಿಹಾಸಿಕ ತೀರ್ಮಾನದಂತೆ, ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕರ ಅಧ್ಯಕ್ಷತೆಯ ಸಭೆಗಳಲ್ಲಿ 1 ಕೋಟಿ ರೂ.ವರೆಗೆ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಲ್ಲಿನ ಮುರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ’ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದ್ದು, ರಾಜ್ಯ ಸರ್ಕಾರವು ಅದಕ್ಕಾಗಿ ಶೇಕಡಾ ೪೦ ರಷ್ಟು ಅನುದಾನ ಭರಿಸುತ್ತಿದೆ. ಎಷ್ಟೇ ಆರ್ಥಿಕ ಅಭಾವವಿದ್ದರೂ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕೊಳವೆಬಾವಿಗಳ ದುರಸ್ತಿಗೆ ಆದ್ಯತೆ ನೀಡಬೇಕು. ಹೊಸದಾಗಿ ಕೊಳವೆಬಾವಿ ಕೊರೆಯುವಾಗ ದುರುಪಯೋಗ ತಡೆಯಲು ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಲು ’ಜಿಪಿಎಸ್’ (ಉPS) ಟ್ರ್ಯಾಕಿಂಗ್ ಕಡ್ಡಾಯಗೊಳಿಸಲಾಗಿದೆ. ಶಾಸಕರು ಕೂಡ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಜನರ ಬದುಕಿನ ಸುಧಾರಣೆ ಮತ್ತು ಸಮಸ್ಯೆಗಳ ಪರಿಹಾರವೇ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದರು. ರಾಜ್ಯದಲ್ಲಿ ಎದುರಾಗಿರುವ ಭೀಕರ ಬರದ ಛಾಯೆಯನ್ನು ತಡೆದು, ಜನರಿಗೆ ನೆರವಾಗಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ:
ಆಲಮಟ್ಟಿ ಭಾಗವನ್ನು ಹೊರತುಪಡಿಸಿ ರಾಜ್ಯದ ಉಳಿದೆಡೆ ತೀವ್ರ ನೀರಿನ ಅಭಾವ ಉಂಟಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ರೀತಿಯಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನೀರಿನ ಅಭಾವ ಎದುರಿಸಲು ಜಿಲ್ಲಾಧಿಕಾರಿಗಳ ಬಳಿ ಅಗತ್ಯ ಅನುದಾನವಿದ್ದು, ಅಗತ್ಯ ಬಿದ್ದಲ್ಲಿ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಮತ್ತು ವಿವಿಧ ಪ್ರಾದೇಶಿಕ ವಿಚಾರಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಪರಿಸ್ಥಿತಿ ಪರಿಶೀಲಿಸಲು ಶೀಘ್ರದಲ್ಲೇ ಕೇಂದ್ರದ ತಂಡ ಆಗಮಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ ಡಿ.ಕೆ. ಶಿವಕುಮಾರ್, ಆರ್ಒ ಪ್ಲಾಂಟ್ಗಳ ದುರಸ್ತಿಗೆ ಅನುದಾನದ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು. ಕೆಟ್ಟಿರುವ ಆರ್ಒ ಪ್ಲಾಂಟ್ಗಳ ದುರಸ್ತಿಗೆ ನಿಯಮಾನುಸಾರ ವಿಚಕ್ಷಣಾ ಫಂಡ್ ಬಳಸಲು ಸಾರಿಗೆ ಕಮಿಷನರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದರು.
ಎಸ್ಐಆರ್ ಕಾರಣದಿಂದಾಗಿ ಸಭೆಯನ್ನು ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು, ಆದರೆ ಈಗ ಆ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಆಗಸ್ಟ್ ತಿಂಗಳಲ್ಲಿ ಶಾಸನ ಸಭೆ ಕರೆಯಲು ಅಥವಾ ಸೂಕ್ತ ದಿನಾಂಕ ನಿಗದಿಪಡಿಸಲು ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೇ ದಿನಾಂಕ ತೀರ್ಮಾನವಾಗಲಿದೆ. ಸಭೆಯಲ್ಲಿ ಶಾಸಕರು ಮುಕ್ತ ಮನಸ್ಸಿನಿಂದ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಮಳೆ ಕೊರತೆಯಿಂದ ಬಿತ್ತನೆ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಹೀಗಾಗಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದು ಮತ್ತು ಬರ ಪರಿಹಾರ ಯೋಜನೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಕಂದಾಯ, ಗ್ರಾಮೀಣ ಅಭಿವೃದ್ಧಿ (ಖಆPಖ), ನೀರಾವರಿ ಹಾಗೂ ಆಹಾರ ಇಲಾಖೆಗಳು ’ಟೀಮ್ ಕರ್ನಾಟಕ’ ಮಾದರಿಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಮುಖ್ಯಮಂತ್ರಿ ನಿರ್ದೇಶಿಸಿದರು.



