ಡಿಸೆಂಬ‌ರ್ ಅಂತ್ಯಕ್ಕೆ ಶಿಗ್ಗಾವಿ ತಾಲೂಕಿನ ಎಲ್ಲ ಮನೆಗೂ ನೀರು: ಬೊಮ್ಮಾಯಿ

ಹೊಸದಿಗಂತ ವರದಿ, ಹಾವೇರಿ (ಶಿಗ್ಗಾವಿ) :

ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಶಿಗ್ಗಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿ (ನಳದ) ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ತಾಲೂಕಿನ ತಡಸ್ ಗಾಮದಲ್ಲಿ ಗಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 2022-23 ನೇ ಸಾಲಿನ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ಅಡಿ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕುಡಿಯುವ ನೀರು ಒದಗಿಸಲು ನೈಸರ್ಗಿಕವಾದ ಅನೇಕ ಸಮಸ್ಯೆಗಳು ಇವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಎರಡು ಬಾರಿ ಪ್ರಸ್ತಾಪ ಮಾಡಿದ್ದರೂ, ಜಾರಿಗೆ ತರಲು ಸಾಧ್ಯವಾಗಲಿಲ್ಲ. ಆ ವೇಳೆ ನಮಗೆ ಪ್ರಧಾನಿ ನರೇಂದ್ರ ಮೋದಿಯವರ ಜಲ ಜೀವನ್ ಮಿಷನ್ ಯೋಜನೆ ವರವಾಗಿ ಬಂದಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಸಹ ಹಣ ನೀಡುತ್ತವೆ ಎಂದರು.

ಶಿಗ್ಗಾವಿ, ಸವಣೂರು, ಹಾನಗಲ್ ಮೂರು ತಾಲೂಕಿನ 438 ಕೋಟಿ ರೂ. ವೆಚ್ಚದ ಜಲ ಜೀವನ್ ಮಿಷನ್ ಯೋಜನೆ ಇದರಲ್ಲಿ ಸುಮಾರು ಮೂರು ಕೋಟಿ ರೂ. ತಡಸ್ ಗ್ರಾಮಕ್ಕೆ ನೀಡಲಾಗಿದೆ. ಸುಮಾರು 2500 ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದರು.

ಕರ್ನಾಟಕದಲ್ಲಿ 25 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಕೇವಲ ೩ ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿರುವ ಕೀರ್ತಿ ಹಿಂದಿನ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here