ಹೊಸ ದಿಗಂತ ವರದಿ, ಮೈಸೂರು:
ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂಗೆ ಪಕ್ಷ ಟಿಕೆಟ್ ಕೊಟ್ಟು ಎಂಎಲ್ಸಿ ಮಾಡಿದೆ. ಆದರೆ ಈಗ ಅಧಿಕಾರ ಇಲ್ಲ ಅಂತ ಪಕ್ಷ ಬಿಟ್ಟ ಮೇಲೆ ಇದನ್ನೆಲ್ಲಾ ಮಾತನಾಡಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬುಧವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ರಾಜ್ಯ ಸರ್ಕಾರವನ್ನು ಬೀಳಿಸುವುದಿಲ್ಲ. ನಾವು ಯಾರನ್ನು ಹಣ ಕೊಟ್ಟು ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬಂದಾಗ ಬಿಜೆಪಿಯಿಂದ ಎಷ್ಟು ಜನ ಶಾಸಕರು ಪಕ್ಷಕ್ಕೆ ಬರುತ್ತಾರೆ ಎಂದು ಗೊತ್ತಾಗುತ್ತದೆ. ನಾವು ಬಿಜೆಪಿಯವರ ರೀತಿ ಆಪರೇಷನ್ ಮಾಡಲ್ಲ. ಭ್ರಷ್ಟಾಚಾರದ ಹಣದಿಂದ ಶಾಸಕರನ್ನು ಖರೀದಿ ಮಾಡಲ್ಲ. ನಾವು ಸರ್ಕಾರವನ್ನು ಬೀಳಿಸಬೇಕಿಲ್ಲ. ಚುನಾವಣೆ ಹತ್ತಿರ ಬಂದಾಗ ಅವರ ನಮ್ಮ ಹತ್ತಿರ ಬರ್ತಾರೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ರಾಜಕೀಯಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಇಲ್ಲ, ಸಲ್ಲದ ಆರೋಪ ಮಾಡುತ್ತಾರೆ. ಬಿಜೆಪಿ ಪಕ್ಷದಲ್ಲೇ ಅವರಿಗೆ ಯಾವುದೇ ಮಾನ್ಯತೆ ಇಲ್ಲ. ಆದರೂ ಬೇರೆ ಪಕ್ಷದ ಬಗ್ಗೆ ಮಾತನಾಡುತ್ತಾರೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಬೆಳಸುವುದಕ್ಕೆ ಆದ್ಯತೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕೃತಜ್ಞತೆ ಇಲ್ಲದ ರೀತಿ ನಡೆದು ಕೊಂಡಿಲ್ಲ ಎಂದರು.