ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟವನ್ನು ಬೆಂಬಲಿಸಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಒಂದು ವೇಳೆ ಅಗತ್ಯವಿದ್ದರೆ ರಾಷ್ಟ್ರಪತಿಗಳ ಬಳಿ ತೆರಳುವುದಾಗಿ ಹೇಳಿದ್ದಾರೆ.
ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ಇಂದು ಪ್ರತಿಭಟಿಸಿದ ರೈತ ಸಂಘ ನಾಳೆ ಹರಿಯಾಣದಲ್ಲಿ ನಡೆಯಲಿರುವ ಸಭೆಯಲ್ಲಿ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ತಮ್ಮ ಪದಕಗಳನ್ನು ಗಂಗಾ ನದಿಗೆ ಹಾಕದಂತೆ ಕುಸ್ತಿಪಟುಗಳ ಮನವೊಲಿಸಿದ ಟಿಕಾಯತ್ ಅಗತ್ಯವಿದ್ದರೆ ನಾವು ಭಾರತದ ರಾಷ್ಟ್ರಪತಿಗಳ ಬಳಿಗೆ ಹೋಗುತ್ತೇವೆ. ನಾವು ನಿಮ್ಮೊಂದಿಗಿದ್ದೇವೆ, ನೀವು ಚಿಂತಿಸಬೇಕಾಗಿಲ್ಲ ಎಂದು ಅವರು ಇಂದು ಮುಜಾಫರ್ನಗರದಲ್ಲಿ ನಡೆದ ಬೃಹತ್ ಸಭೆಯಲ್ಲಿ ತಿಳಿಸಿದರು.
ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಅವರು ಬಿಹಾರದಲ್ಲಿ ಲಾಲು ಯಾದವ್ ಅವರ ಕುಟುಂಬವನ್ನು ಒಡೆದರು. ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದೊಂದಿಗೆ ಅವರು ಏನು ಮಾಡಿದ್ದಾರೆಂದು ನೋಡಿ. ರಾಜಸ್ಥಾನದಲ್ಲಿ ಅದೇ ವಿಷಯ ನಡೆಯುತ್ತಿದೆ ಎಂದು ಅವರು ಸಭೆಯಲ್ಲಿ ಭಾಗವಹಿಸಿದ್ದ ರೈತರಿಗೆ ಹೇಳಿದರು.