ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ನಮ್ಮ ಜನರಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಕೊಚ್ಚಿಯ ಜವಾಹರಲಾಲ್ ನೆಹರು ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎನ್ಡಿಎ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯು ಕೇರಳದಲ್ಲಿರುವ ಕುಟುಂಬಗಳಲ್ಲಿ ತೀವ್ರ ಆತಂಕ ಮೂಡಿಸಿದೆ.ಕೇಂದ್ರ ಸರ್ಕಾರವು ವಿದೇಶದಲ್ಲಿರುವ ಭಾರತೀಯರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು.
ನಾವು ಗಲ್ಫ್ನಲ್ಲಿರುವ ನಮ್ಮ ಜನರಿಗೆ ಎಲ್ಲಾ ರೀತಿಯ ಸಹಾಯ ಒದಗಿಸುತ್ತೇವೆ. ನಮ್ಮ ದೇಶವಾಸಿಗಳು ವಿದೇಶಗಳಲ್ಲಿ ತೊಂದರೆಯಲ್ಲಿದ್ದಾಗಲೆಲ್ಲಾ, ನಾವು ಕೈಬಿಡಲಿಲ್ಲ. ನಮ್ಮ ಕಾರ್ಯಾಚರಣೆಗಳು ಮತ್ತು ರಾಯಭಾರ ಕಚೇರಿಗಳು 24/7 ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ ಎಂದು ಪ್ರಧಾನಿ ಹೇಳಿದರು.
ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಗುಡುಗಿದ ಮೋದಿ, ಪಶ್ಚಿಮ ಏಷ್ಯಾ ಸಂಘರ್ಷದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಯುವರಾಜನಿಗೆ ದೇಶದಲ್ಲಿನ ಅಭಿವೃದ್ಧಿಯ ಬಗ್ಗೆ ಅರಿವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಪ್ರಚೋದನಕಾರಿ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ.ಇಂತಹ ಸಂದರ್ಭವನ್ನು ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ವಿಷಯ ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.



