ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅನುಭವವಾಗುತ್ತಿರುವ ಶೀತ ಹಾಗೂ ಒಣಹವೆಯ ಪರಿಸ್ಥಿತಿ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿ ಬಹುತೇಕ ಎಲ್ಲಾ ಭಾಗಗಳಲ್ಲಿ ಚಳಿಯ ಜೊತೆಗೆ ಒಣ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು ದಿನಗಳವರೆಗೂ ಮಳೆ ಸಾಧ್ಯತೆ ಇಲ್ಲದೆ, ಒಣಹವೆ ರಾಜ್ಯದ ಮೇಲೆ ಪ್ರಭಾವ ಬೀರುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚಳಿ ತೀವ್ರವಾಗಿದ್ದು, ಒಣ ವಾತಾವರಣವೇ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಇದೇ ಸ್ಥಿತಿ ಇರಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಿಲ್ಲದ ಒಣಹವೆಯೇ ಇರಲಿದೆ.
ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಮಂಜು ಆವರಿಸುವ ಸಾಧ್ಯತೆ ಇದ್ದು, ಇಂದು ನಗರದಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.




