ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಮಾನ್ಸೂನ್ ಮಾರುತಗಳು ಮತ್ತೆ ಭಾರಿ ಸಕ್ರಿಯಗೊಂಡಿದ್ದು, ವರುಣನ ಆರ್ಭಟ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಜುಲೈ 27 ಮತ್ತು 28 ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜುಲೈ 28 ರಂದೂ ಕೂಡ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಹೀಗಾಗಿ ಕರಾವಳಿ ಭಾಗದ ನಿವಾಸಿಗಳು ಮತ್ತು ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಹವಾಮಾನ ವರದಿ
ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಪ್ರಭಾವ ಕಂಡುಬರಲಿದೆ. ಜುಲೈ 27 ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ.
ಇದೇ ವೇಳೆ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಜುಲೈ 28 ರಂದು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



