ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ನಿನ್ನೆ ಬೆಂಗಳೂರಿನೊಂದಿಗೆ ಅನೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ಅದೇ ಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ.
ಕರಾವಳಿ ಭಾಗಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗಲಿದ್ದು, ಸಂಜೆಗಿಂತ ಮುಂಜಾನೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ:
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳು ಮಳೆಯ ವಲಯಕ್ಕೆ ಸೇರಿವೆ. ಗಾಳಿಯ ದಿಕ್ಕು ಸ್ಪಷ್ಟವಾಗದ ಕಾರಣ ಕೆಲವೆಡೆ ಆಲಿಕಲ್ಲು ಸಹಿತ ಮಳೆಯೂ ಕಾಣಿಸಿಕೊಳ್ಳುತ್ತಿದೆ.
ಮಾರ್ಚ್ 20ರವರೆಗೆ ರಾಜ್ಯದಾದ್ಯಂತ ಮಳೆಯು ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಇನ್ನೂ ಕೆಲವು ದಿನಗಳು ಮುಂದುವರಿಯುವ ಸಾಧ್ಯತೆ ಇದೆ.



