ಹೊಸದಿಗಂತ ವರದಿ ಹುಬ್ಬಳ್ಳಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಅವರನ್ನು ಆದರದಿಂದ ಸ್ವಾಗತಿಸುತ್ತೇನೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈದ್ಗಾ ಮೈದಾನ ವಿಚಾರವಾಗಿ ನಾನು ಮತ್ತು ಬಸವರಾಜ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ಕೈಗೊಂಡಿದ್ದೇವು, ಇದೀಗ ಪಾಪ ಬೊಮ್ಮಾಯಿ ಅವರು ಬಿಜೆಪಿ ಸೇರಿ ತಬ್ಬಲಿ ಆಗಿದ್ದಾರೆ ಎಂದರು.
ಸದ್ಯ ಬಸವರಾಜ ಬೊಮ್ಮಾಯಿ ಅವರ ಸ್ಥಿತಿ 2ಎ, ಎಸ್ ಸಿ ಎಸ್ ಟಿ, ಹಾಗೂ ಕುರುಬ ಸಮಾಜದ ಮೀಸಲಾತಿ ವಿಚಾರದ ನಡುವೆ ಸಿಲುಕಿ ಹಾಕಿಕೊಂಡಿದ್ದಾರೆ. ಒಂದು ಕಡೆಗೆ ಕೇಶವ ಕೃಪ, ಇನ್ನೊಂದೆಡೆ ಬಸವ ಕೃಪದಿಂದ ಒದ್ದಾಡುತ್ತಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವ್ಯಂಗ್ಯವಾಡಿದರು.
ಜೆಡಿಎಸ್ ಶಿಕ್ಷಣ, ಆರೋಗ್ಯ, ನೀರಾವರಿಯ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಪಂಚರತ್ನ ಯಾತ್ರೆ ನಡೆಸುತ್ತಿದೆ. ಅದರಲ್ಲಿ ಮುಖ್ಯವಾಗಿ ಮಹದಾಯಿ, ಕೃಷ್ಣ, ಮಲಪ್ರಭಾ, ಘಟಪ್ರಭಾ ನದಿಯ ಒಂದಿಚ್ಚು ನೀರನ್ನು ಸಮುದ್ರಕ್ಕೆ ಸೇರಲು ಬಿಡುವುದಿಲ್ಲ. ಬದಲಾಗಿ ರೈತರ ಕೃಷಿಗೆ ಇಲ್ಲವೇ ಜನರಿಗೆ ಕುಡಿಯುವ ನೀಡುವ ಉದ್ದೇಶ ಹೊಂದಿದ್ದೇವೆ. ಗ್ರಾಮ ಮಟ್ಟದಲ್ಲಿ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ, ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಕೆ ಮಾಡಿ ಹೆಚ್ಚು ಉತ್ಪನ್ನ ಬೆಳೆಯುವ ಯೋಜನೆ ತರಲಿದ್ದೇವೆ ಎಂದರು.