ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್ನಲ್ಲಿ ನಡೆದಿದೆ.
ಬಂಡೆ ಕೆಳಗೆ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಹುಲವೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿತ್ತು. ಇಂದು ಬೆಳಗಿನ ಜಾವ ಕಾರ್ಮಿಕರು ಎಂದಿನಂತೆ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ, ದೊಡ್ಡ ಬಂಡೆಗಳನ್ನು ಪುಡಿ ಮಾಡಲು ಅತಿಯಾದ ತೀವ್ರತೆಯ ಸ್ಫೋಟಕಗಳನ್ನು ಬಳಸಲಾಗಿದೆ.
ಈ ವೇಳೆ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿ ಬಂಡೆ ಸ್ಫೋಟಿಸುವಾಗ ಇಡೀ ಪ್ರದೇಶವೇ ಬಹುದೊಡ್ಡ ಸೌಂಡ್ ಜೊತೆಗೆ ಸಿಡಿದಿದೆ. ಸ್ಫೋಟದ ತೀವ್ರತೆಗೆ ಬಂಡೆ ಕುಸಿದು ಸಿಲುಕಿ ಏಳು ಜನ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಹಲವರು ಅಡಿಯಲ್ಲಿ ಸಿಲುಕಿರಬಹುದು ಎನ್ನಲಾಗಿದೆ.



