ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ಧ ಶಿಕ್ಷಣತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಪ್ರಾಣಾಪಾಯ ತಡೆಯಲು ಅಗತ್ಯವಿದ್ದರೆ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಬಲವಂತವಾಗಿ ದ್ರವ ಆಹಾರ ನೀಡಲು ಅನುಮತಿ ನೀಡಬೇಕು ಎಂದು ಅರ್ಜಿದಾರರು ವಿನಂತಿಸಿದ್ದಾರೆ.
18 ದಿನಗಳ ನಿರಂತರ ಉಪವಾಸ ಮತ್ತು ತೂಕ ಇಳಿಕೆ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸೋನಂ ವಾಂಗ್ಚುಕ್ ಅವರು ಜಂತರ್ ಮಂತರ್ನಲ್ಲಿ ಕಳೆದ 18 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರತಿಭಟನೆಯ ಅವಧಿಯಲ್ಲಿ ಅವರು ಈಗಾಗಲೇ ಸುಮಾರು 8.5 ಕೆಜಿ ತೂಕ ಕಳೆದುಕೊಂಡಿದ್ದು, ಸೂಕ್ತ ವೈದ್ಯಕೀಯ ನೆರವು ಸಿಗದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಕೋರ್ಟ್ ನೋಟಿಸ್
ಬುಧವಾರ (ಜುಲೈ 15) ಈ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿತ್ತು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಗುರುವಾರದೊಳಗೆ (ಜುಲೈ 16) ಲಿಖಿತ ಉತ್ತರ ನೀಡುವಂತೆ ಗಡುವು ವಿಧಿಸಿದೆ. ಪ್ರಕರಣದ ಮುಂದಿನ ಪ್ರಮುಖ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಪೀಠ ಸ್ಪಷ್ಟಪಡಿಸಿದೆ.



