ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ರಾಜ್ಯ ಬಜೆಟ್ ಯಾವಾಗ ಎನ್ನುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಮಹಾಶಿವರಾತ್ರಿ ಹಬ್ಬದ ಬಳಿಕೆ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿ ಮಾಡ್ತೇವೆ ಎಂದಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು.
ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಅಸಮಾಧಾನಗೊಂಡ ಸಿದ್ದರಾಮಯ್ಯ ಅವರು ಪದೇ ಪದೆ ಇದೇ ವಿಷಯದ ಬಗ್ಗೆ ಕೇಳಬಾರದು. ಈ ವಿಚಾರದಲ್ಲಿ ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.



