ನಾನು ಸಚಿವ ಸಂಪುಟ ಮತ್ತೆ ಸೇರುವುದು ಪಕ್ಷದ ನಾಯಕರುಗಳಿಗೆ ಬಿಟ್ಟ ವಿಚಾರ: ಕೆ.ಎಸ್.ಈಶ್ವರಪ್ಪ

ಹೊಸದಿಗಂತ ವರದಿ, ಮೈಸೂರು:

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪದಿಂದ ಮುಕ್ತನಾಗಿರುವ ನಾನು ಸಚಿವ ಸಂಪುಟ ಮತ್ತೆ ಸೇರುವುದು ಪಕ್ಷದ ನಾಯಕರುಗಳಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಆಷಾಢ ಮಾಸದ ನಾಲ್ಕನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದ ಬಳಿಕ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಬಿ ರಿಪೋರ್ಟ್ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮೊದಲ ದಿನವೇ ಈ ಪ್ರಕರಣದಿಂದ ಆರೋಪ ಮುಕ್ತನಾಗಿ ಬರುತ್ತೇನೆಂದು ಗೊತ್ತಿತ್ತು. ನಾನು ಈ ಪ್ರಕರಣದಲ್ಲಿ ಯಾವ ತಪ್ಪು ಮಾಡಿಲ್ಲ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ತನಿಖೆ ಮೂಲಕ ಈಗ ಸಂಪೂರ್ಣ ಆರೋಪ ಮುಕ್ತನಾಗಿದ್ದೇನೆ. ಪ್ರಕರಣದಿಂದ ಪಕ್ಷಕ್ಕೆ ಇದ್ದ ಮುಜುಗರ ಈಗ ನಿವಾರಣೆಯಾಗಿದೆ ಎಂದರು.
ಪ್ರಕರಣದಲ್ಲಿ ಬಿ ರಿಪೋರ್ಟ್ ಆದರೂ ಸಹ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತದೆ ಎಂದು ಗೊತ್ತಿದ್ದರೂ, ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವುದು ಬೇಸರ ಮೂಡಿಸಿದೆ. ಸಿದ್ದರಾಮಯ್ಯ ಕಾನೂನು ಪಂಡಿತರ ಆಗಿದ್ದಾರೆ. ಸುಮ್ಮನೆ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನನ್ನದು ಯಾವ ತಪ್ಪು ಇರದಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಈಗ ಆರೋಪ ಮುಕ್ತ ನಾಗಿದ್ದೇನೆ. ಸಂಪುಟ ಭಾಗವಾಗುವ ಎಲ್ಲಾ ನಿರ್ಧಾರಗಳು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!