ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ ಮಾಡೋಕಾಗಿ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಿದೆ ಎಂದು ಬಿಜೆಪಿ ಟೀಕೆ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಸಾಲದ ಮಿತಿಯನ್ನು ಕರ್ನಾಟಕ ಹಣಕಾಸಿನ ಜವಾಬ್ದಾರಿ ಕಾಯ್ದೆ (ಕೆಎಫ್ಆರ್ಎ) ನಿಯಮಗಳೊಳಗೆ ಇಟ್ಟುಕೊಂಡೇ ಬಜೆಟ್ ಮಂಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು ಸುಮಾರು 165 ಲಕ್ಷ ಕೋಟಿ ರೂ. ಆಗಿದೆ. ಈ ವರ್ಷದ ಕೇಂದ್ರ ಸರ್ಕಾರದ ಹಣಕಾಸು ಕೊರತೆ ಶೇ.4.4 ಆಗಿದ್ದು, ಒಟ್ಟು ಸಾಲ 218 ಲಕ್ಷ ಕೋಟಿ ರೂ. ಆಗಿದೆ ಎಂದು ಹೇಳಿದರು.
2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಸಾಲ 53.11 ಲಕ್ಷ ಕೋಟಿ ರೂ. ಇತ್ತು. ಈಗ ಅದು 165 ಲಕ್ಷ ಕೋಟಿ ರೂ. ಆಗಿದೆ. ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ಅನುದಾನ ಸಂಪೂರ್ಣವಾಗಿ ಬಂದಿದ್ದರೆ ರಾಜ್ಯದಲ್ಲಿ ಆದಾಯ ಕೊರತೆ ಉಂಟಾಗುತ್ತಿರಲಿಲ್ಲ. ಟೀಕೆ ಮಾಡುವುದು ಸುಲಭ, ಹೀಗಾಗಿ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಒಟ್ಟು ಸಾಲ 55,33,847 ಕೋಟಿ ರೂ. ಇತ್ತು ಎಂದು ತಿಳಿಸಿದರು.



