ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರಿ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಲು ನಡ್ಡಾ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಅವರೊಂದಿಗೆ ರಾಜ್ಯ ಪ್ರವಾಸದಲ್ಲಿದ್ದಾರೆ. ಸಿರ್ಮೌರ್ನ ಪೌಂಟಾ ಸಾಹಿಬ್ನಿಂದ ರಾಜ್ಯದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ಗಳಿಗೆ ಭೇಟಿ ನೀಡಿದ ನಡ್ಡಾ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಇದೇ ವೇಳೆ, ಆಗಸ್ಟ್ 10ರಂದು ಹಠಾತ್ ಪ್ರವಾಹದಲ್ಲಿ ಐವರನ್ನು ಕಳೆದುಕೊಂಡಿದ್ದ ಕುಟುಂಬವನ್ನು ಭೇಟಿಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಮಾಚಲ ಪ್ರದೇಶವು ಭಾರಿ ನಷ್ಟ ಅನುಭವಿಸಿದ್ದು, ಇಲ್ಲಿನ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರವು ಗಂಭೀರವಾಗಿ ಚಿಂತಿಸಿದ್ದು, ಪರಿಹಾರ ಒದಗಿಸಲು ಮತ್ತು ಪುನಃಸ್ಥಾಪನೆ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಆಡಳಿತದಿಂದ ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರದ ಸಹಾಯವು ಮುಂದುವರಿಯುತ್ತದೆ ಮತ್ತು ಎಲ್ಲಾ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು.