ಹೊಸದಿಂಗತ ಡಿಜಿಟಲ್ ಡೆಸ್ಕ್:
ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಡಿಕೇರಿ ಜೆಲ್ಲೆ ಸಿದ್ದಾಪುರ ಸಮೀಪದ ಗುಯ್ಯ ಗ್ರಾಮದ ಪಳ್ಳಕೆರೆ ಕಾಫಿ ತೋಟದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಗಾಯಗೊಂಡ ಮಹಿಳೆ. ಸೋಮವಾರ ಬೆಳಗ್ಗೆ ಕಾರ್ಮಿಕರೊಂದಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿರುವುದಾಗಿ ಹೇಳಲಾಗಿದೆ.
ಕಾಡಾನೆಗಳ ಹಿಂಡೊಂದು ಕಾಫಿ ತೋಟದಲ್ಲೇ ಬೀಡುಬಿಟ್ಟಿದ್ದು, ಕಾಡಾನೆ ಹಾವಳಿ ತಡೆಗಟ್ಟುವಂತೆ ಕಾರ್ಮಿಕರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಪೋಲಿಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು,ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.